Published
2 years agoon
By
Akkare News
ಬೆಂಗಳೂರು: ದೇವಾಲಯಗಳನ್ನು ಆರ್ಟಿಐ (ಮಾಹಿತಿ ಹಕ್ಕು ಕಾಯ್ದೆ)ಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಈ ವಿಚಾರವಾಗಿ ಅಖೀಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಗುರುವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಅರ್ಜಿದಾರರ ಪರ ವಕೀಲ ಎನ್.ಆರ್. ನಾಗರಾಜ್, ದೇವಾಲಯಗಳು ಸಾರ್ವಜನಿಕ ಸಂಸ್ಥೆಗಳು ಅಲ್ಲ ಎಂದು ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ ಹೈಕೋರ್ಟ್ಗಳಲ್ಲದೆ ಕರ್ನಾಟಕದ ಹೈಕೋರ್ಟ್ ಸಹ ಹೇಳಿದೆ.
ಮುಖ್ಯವಾಗಿ ದೇವಸ್ಥಾನಗಳು ಸರಕಾರದ ವ್ಯಾಪ್ತಿಗೆ ಬರುವುದಿಲ್ಲ. ದೇವಸ್ಥಾನಗಳ ಮೇಲೆ ಸರಕಾರದ ಆರ್ಥಿಕ, ಭೌತಿಕ ಅಥವಾ ಆಡಳಿತಾತ್ಮಕ ನಿಯಂತ್ರಣ ಇರುವುದಿಲ್ಲ ಎಂದು ಮಾರ್ತಾಂಡ ವರ್ಮ ವರ್ಸಸ್ ಕೇರಳ ರಾಜ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಆದೇಶದ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ಪರಿಶೀಲಿಸಿದ ನ್ಯಾಯಪೀಠ ಸುಪ್ರೀಂಕೋರ್ಟ್ ಆದೇಶದ ಪ್ರತಿಯನ್ನು ಈಗಷ್ಟೇ ವಕೀಲರು ಹಾಜರುಪಡಿಸಿದ್ದಾರೆ. ಈ ಆದೇಶವನ್ನು ಕೂಲಂಕುಷವಾಗಿ ಪರಿಶೀಲಿಸಬೇಕಿದೆ ಎಂದು ಹೇಳಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.