Published
1 year agoon
By
Akkare News
ಉಡುಪಿ: ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾನಹಾನಿ ಪದ ಬಳಕೆ ಮಾಡಿರುವ ಸಿ.ಟಿ. ರವಿ ವಿರುದ್ಧ ಉಡುಪಿ ಕಾಂಗ್ರೆಸ್ ಎಸ್.ಸಿ ಘಟಕ ಹಾಗೂ ಉಡುಪಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ಅಮಿತ್ ಶಾ ಹಾಗೂ ಸಿಟಿ ರವಿ ವಿರುದ್ಧ ದಿಕ್ಕಾರ ಕೂಗಿದರು. ಅಮಿತ್ ಶಾ ಅವರನ್ನು ಕೂಡಲೇ ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು. ಸಿಟಿ ರವಿ ಅವರ ಪರಿಷತ್ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು, ಬಿಜೆಪಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪ್ರಧಾನಿಯಾಗಲು, ಸರಕಾರ ನಡೆಸಲು, ಅಧಿಕಾರಕ್ಕಾಗಿ ಸಂವಿಧಾನ ಬೇಕು. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಗರಿಗೆ ತಾತ್ಸರ ಎಂದು ಆಕ್ರೋಶ ಹೊರಹಾಕಿದರು.



