Published
1 year agoon
By
Akkare News
ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ ಮಂಡಿಸಿದ 2025ರ ಬಜಟ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವನ್ನು ಕೇಂದ್ರ ಎಸಗಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಬೇಕಿದೆ. ಅಲ್ಲದೆ, ಆಂಧ್ರ ಮತ್ತು ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸುವ ಮತ್ತು ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ. ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಃ, ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದು ಸಿಎಂ ವಿಶ್ಲೇಷಣೆ ಮಾಡಿದ್ದಾರೆ.

“2024-25 ರ ಪತಿಷ್ಕೃತ ಬಜೆಟ್ 47,16000 ಕೋಟಿ ಆಗಿತ್ತು. 104000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ.” ಎಂದು ಅವರು ಹೇಳಿದ್ದಾರೆ.
“ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ” ಎಂದು ಸಿಎಂ ಹೇಳಿದ್ದಾರೆ.
