Published
11 months agoon
By
Akkare News
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 61ನೇ ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ.
ರನ್ಯಾ ರಾವ್ ಪ್ರಕರಣ ದಲ್ಲಿ ಅಂತಾರಾಷ್ಟ್ರೀಯ ಸಂಪರ್ಕಗಳು ಇದೆ. ಒಂದು ವರ್ಷದ ಅವಧಿಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ರನ್ಯಾರಾವ್ ಳಿಂದ ಬರೋಬ್ಬರಿ 4.83 ಕೋಟಿ ರೂ. ಸುಂಕ ವಂಚನೆಯಾಗಿದೆ ಎಂಬುದು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಐಆರ್) ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿ ರನ್ಯಾ ರಾವ್ ಮೇಲಿನ ಆರೋಪಗಳು ಗಂಭೀರ ಸ್ವರೂಪದಲ್ಲಿವೆ. ಜಾಮೀನಿನ ಮೇಲೆ ಬಿಡುಗಡೆಯಾದರೆ ಆರೋಪಿ ಸಾಕ್ಷಿ ನಾಶಕ್ಕೆ ಯತ್ನಿಸುವ, ದೇಶ ಬಿಟ್ಟು ಪರಾರಿಯಾಗುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ತನಿಖೆ ಹಾದಿ ತಪ್ಪಬಹುದು. ಹೀಗಾಗಿ, ರನ್ಯಾ ರಾವ್ ಅವಗೆ ಜಾಮೀನು ನೀಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಈ ಹಿಂದೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾರಾವ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದೀಗ ಸೆಷನ್ಸ್ ನ್ಯಾಯಾಲಯ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದೆ.
ವಿಚಾರಣೆ ವೇಳೆ ಡಿಐಆರ್ ಪರ ವಕೀಲರಾದ ಮಧುರಾವ್ ವಾದ ಮಂಡಿಸಿ, ರನ್ಯಾ ರಾವ್ ಚಿನ್ನವನ್ನು ಅಕ್ರಮವಾಗಿ ಸಾಗಣೆ ಮಾಡಿರುವುದು ಗಂಭೀರ ಸ್ವರೂಪದ ಜಾಮೀನು ರಹಿತ ಅಪರಾಧವಾಗಿದೆ. ಈ ಪ್ರಕರಣದಲ್ಲಿ ಅಕ್ರಮ ಚಿನ್ನ ಸಾಗಣೆ ಜತೆಗೆ, ಹವಾಲಾ ಮೂಲಕ ಹಣವನ್ನು ವಿದೇಶಕ್ಕೆ ರವಾನಿಸಿರುವುದಾಗಿ ಆರೋಪಿ ರನ್ಯಾರಾವ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ. ಆದರಿಂದ ಆಕೆಗೆ ಅಂತಾರಾಷ್ಟ್ರೀಯ ಸಂಪರ್ಕಗಳು ಇರುವುದು ಗೊತ್ತಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ವಾದಿಸಿದ್ದರು.
ಅದಕ್ಕೆ ಆಕ್ಷೇಪಿಸಿದ್ದ ರನ್ಯಾರಾವ್ ಪರ ವಕೀಲರು, ರನ್ಯಾ ಅವರ ವಿಚಾರಣೆ ಮತ್ತು ಬಂಧನ ಪ್ರಕ್ರಿಯೆಯಲ್ಲಿ ಡಿಐಆರ್ ಅಧಿಕಾರಿಗಳು ಸಂಪೂರ್ಣವಾಗಿ ಕಸ್ಟಮ್ಸ… ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ, ರನ್ಯಾ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು. ಕೊನೆಗೆ ವಾದ-ಪ್ರತಿವಾದ ಆಲಿಸಿದ ಕೋರ್ಟ್ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.