Published
9 hours agoon
By
Akkare Newsಬೆಳ್ತಂಗಡಿ :ಏಪ್ರಿಲ್ 7: ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್ಗೆ 2012-2013 ರಲ್ಲಿ ಬೆಂಕಿ ಹಚ್ಚಿದ ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ, ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.
ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಜನವರಿಯಲ್ಲಿ ಸಮ್ಮತಿಸಿದ್ದರು. ಅದರಂತೆ ಶರಣಾಗತಿ ಪ್ರಕ್ರಿಯೆಯೂ ನಡೆದಿತ್ತು. ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗಿದ್ದರು. ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿತ್ತು.