Published
11 months agoon
By
Akkare News
ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಡ್ಯ (ಏ.26): ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನಲ್ಲಿರುವ ಅತಿಥಿಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಮಾಡುವುದಾಗಿ ಘೋಷಣೆ ಮಾಡಿದ್ದೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ 92 ಕೋಟಿ ಮಂಜೂರಾಗಿದೆ. ಕಾವೇರಿ ಆರತಿ ರಾಜ್ಯದ ಸಂಸ್ಕೃತಿ. ಪ್ರವಾಸಿಗರು ಧಾರ್ಮಿಕವಾಗಿ ಪೂಜೆ ಮಾಡಲು ಅವಕಾಶ ಮಾಡಿಕೊಡಲು ತೀರ್ಮಾನಿಸಿರುವುದಾಗಿ ಹೇಳಿದರು.
ಕಾವೇರಿ ಆರತಿಗೆ ಬರುವ ಜನರಿಗೆ ಎರಡು ರೀತಿಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಒಂದು ಉಚಿತ ಪ್ರವೇಶ ಹಾಗೂ ಟಿಕೆಟ್ ಪಡೆದು ಪ್ರವೇಶ ನೀಡಲು ನಿರ್ಧರಿಸಿದೆ. ಹತ್ತು ಸಾವಿರ ಜನರು ಒಂದೇ ಕಡೆ ಕುಳಿತು ಕಾವೇರಿ ಆರತಿ ನೋಡುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ವಾರದಲ್ಲಿ ಎಷ್ಟು ಬಾರಿ ಆರತಿ ನಡೆಯಬೇಕು ಎಂಬುದನ್ನು ಮುಂದೆ ತೀರ್ಮಾನಿಸುತ್ತೇವೆ. ಇದರಿಂದ ಬಂದ ಹಣವನ್ನ ನಾವು ಪಂಚಾಯಿತಿ ಅಭಿವೃದ್ಧಿಗೆ ಬಳಸುತ್ತೇವೆ. ಇಲ್ಲಿನ ಹಣವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಆಸೆ ನಮಗಿಲ್ಲ ಎಂದು ನುಡಿದರು.