Connect with us

ಸ್ಥಳೀಯ

ಬಲ್ನಾಡು ಶ್ರೀ ದಂಡನಾಯಕ ದೈವದ ವಾಲಸರಿ ನೇಮ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಅಂಗವಾಗಿ ಎ.28ರಂದು ಮುಂಜಾನೆ ಶ್ರೀದಂಡನಾಯಕ ದೈವದ ವಾಲಸರಿ ನೇಮ ನಡೆಯಿತು.

ನೇಮ ನಡಾವಳಿಯ ಪೂರ್ವಭಾವಿಯಾಗಿ ಎ.27ರಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯುವ ದೈವಸ್ಥಾನಕ್ಕೆ ಆಗಮಿಸಿದ ಬಳಿಕ ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಿತು.



ಎ.28ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಪತಿ ಹೋಮ ನಡೆದು ತಂತ್ರ ತೂಗಿದ ಬಳಿಕ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ಆರಂಭಗೊಂಡು ಕಿರುವಾಳು ಭಂಡಾರ ವಾಲಸರಿ ಗದ್ದೆಗೆ ತೆರಳಿ, ದಂಡನಾಯಕ ದೈವದ ಮುಖಾಮುಖಿ ನಡೆದು ವಾಲಸರಿ ಗದ್ದೆಯಲ್ಲಿ ದೈವದ ನೇಮ ನಡೆದು ಕಟ್ಟೆ ಮನೆಯ ಬಳಿಯಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಸಾವಿರಾರು ಮಂದಿ ಭಕ್ತರು ಗದ್ದೆಯ ಸುತ್ತಲೂ ನಿಂತು ಶ್ರೀ ದಂಡನಾಯಕ ದೈವದ ವಾಲಸರಿ, ನೇಮವನ್ನು ಕಣ್ತುಂಬಿಕೊಂಡರು. ಬಳಿಕ ದೈವಸ್ಥಾನಕ್ಕೆ ಆಗಮಿಸಿ ಅಲ್ಲಿ ನೇಮ ನಡೆಯಿತು. ನೇಮೋತ್ಸವದಲ್ಲಿ ಮುಂಜಾನೆಯಿಂದಲೇ ಭಕ್ತರು ತಂಡೋಪತಂಡವಾಗಿ ದೈವಸ್ಥಾನಕ್ಕೆ ಆಗಮಿಸಿ, ಉಳ್ಳಾಲ್ತಿಗೆ ಪ್ರಿಯವಾದ ಮಲ್ಲಿಗೆ ಹೂವು, ಕುಂಕುಮ, ಪಟ್ಟೆ ಸೀರೆ, ಸೀಯಾಳ ಅರ್ಪಿಸಿ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಮಧ್ಯಾಹ್ನ ಶ್ರೀ ಉಳ್ಳಾಲ್ತಿ ದೈವದ ನೇಮ ನಡಾವಳಿಯಲ್ಲಿ ಶ್ಯಾರ ಮನೆಯಿಂದ ವರ್ಷಂಪ್ರತಿ ತರುವ ಚಿನ್ನದ ಮುಗುಳು ಮಲ್ಲಿಗೆಯನ್ನು ಉಳ್ಳಾಲ್ತಿ ದೈವಕ್ಕೆ ಮುಡಿದು ನೇಮ ನಡೆಯಲಿದೆ. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿ ಅನ್ನಪ್ರಸಾದ ಸ್ವೀಕರಿಸಲಿದ್ದಾರೆ. ಅಪರಾಹ್ನ ಪರಿವಾರ ದೈವಗಳಾದ ಶ್ರೀಕಾಳರಾಹು ಮತ್ತು ಮಲರಾಯ ದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ದೈವಸ್ಥಾನದ ಪ್ರಕಟನೆ ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version