Published
10 months agoon
By
Akkare News
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಡಿಲು, ಮಿಂಚು ಸಹಿತ ಭಾರಿ ಉತ್ತಮ ಮಳೆಯಾಗಿದ್ದು, ಅದರಲ್ಲೂ ಬಳ್ಳಾರಿ, ವಿಜಯಪುರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಈ ವರೆಗೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಕುರಿಗಾಹಿಗಳು ಬಲಿಯಾಗಿದ್ದಾರೆ. ಬೀರಪ್ಪ (45), ಸುನೀಲ (26), ವಿನೋದ್ (14) ಮೃತ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದಾಗ ಜೋರು ಮಳೆ ಬಂದಿದೆ. ಈ ವೇಳೆ, ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಭಾರೀ ಮಳೆ, ಟ್ರಾಫಿಕ್ಜಾಮ್
ಬೆಂಗಳೂರಿನಲ್ಲಿ ಸುರಿದ ಗುಡುಗು, ಗಾಳಿ ಸಹಿತ ಭಾರಿ ಮಳೆಗೆ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್, ಮೈತ್ರಿ ಸರ್ಕಲ್, ವಿಧಾನಸೌಧ, ಶಿವಾನಂದ ಸರ್ಕಲ್, ಕೆ.ಆರ್. ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.