Published
15 hours agoon
By
Akkare Newsಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಉಂಟಾದ ಸಾವು–ನೋವಿನ ಪ್ರಕರಣ ನಡೆದ ಒಂದು ದಿನದ ನಂತರ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತು ಮಾಡಿದೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಬುಧವಾರ ನಡೆದಿದ್ದು, ಇದಕ್ಕೆ ಲಕ್ಷಾಂತರ ಜನ ಬಂದಿದ್ದರು. ಇದರಿಂದಾಗಿ ಭಾರಿ ಪ್ರಮಾಣದ ದುರಂತ ಸಂಭವಿಸಿ, 11 ಜನ ಮೃತ ಪಟ್ಟಿದ್ದರು. ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಹಮ್ಮಿಕೊಂಡಿದ್ದೇ ಈ ಅನಾಹುತಕ್ಕೆ ಕಾರಣ ಎಂದು ವಿರೋಧ ಪಕ್ಷಗಳು ದೂರಿದ್ದವು.
ದಾರುಣ ಘಟನೆ ನಡೆದ ಬೆನ್ನಲ್ಲೇ, ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಆದೇಶಿಸಲಾಗಿತ್ತು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಸಭೆಯ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾತ್ರಿ 9ಕ್ಕೆ ಸುದ್ದಿಗೋಷ್ಠಿ ನಡೆಸಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡಿದರು.
‘ದಯಾನಂದ್ ಜತೆಗೆ ಹೆಚ್ಚುವರಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಎಚ್. ಟಿ. ಶೇಖರ್, ಕಬ್ಬನ್ ಪಾರ್ಕ್ ಎಸಿಪಿ ಸಿ. ಬಾಲಕೃಷ್ಣ, ಪೊಲೀಸ್ ಇನ್ಸ್ಪೆಕ್ಟರ್ ಎ.ಕೆ. ಗಿರೀಶ್ ಹಾಗೂ ಅಲ್ಲಿನ ಎಲ್ಲಸಿಬ್ಬಂದಿಯನ್ನು ಅಮಾನತು ಮಾಡಲಾ ಗಿದೆ. ಘಟನೆ ಬಳಿಕ ಪಡೆದ ಪ್ರಾಥಮಿಕ ಮಾಹಿತಿಯಂತೆ ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬಂದಿದೆ. ವಿಸ್ತೃತ ಚರ್ಚೆಯ ನಂತರ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದರು.
3 ಸಂಸ್ಥೆಗಳ ಮುಖ್ಯಸ್ಥರ ಬಂಧನಕ್ಕೆ ಸೂಚನೆ: ಆರ್ಸಿಬಿ ಪ್ರಾಂಚೈಸಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಡಿಎನ್ಎ ಈವೆಂಟ್ ಮ್ಯಾನೇಜ್ಮೆಂಟ್ ಪ್ರೈವೆಟ್ ಲಿಮಿಟೆಡ್ ಸೇರಿ ಮೂರೂ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಲು ಸೂಚನೆ ನೀಡಲಾಗಿದೆ.ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕಠಿಣ ಕ್ರಮಕ್ಕೆ ಸಚಿವರ ಪಟ್ಟು: ಸಚಿವ ಸಂಪುಟ ಸಭೆಯಲ್ಲಿ ಹಾಜರಿದ್ದ ಎಲ್ಲ ಸಚಿವರೂ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೂ ಅಲ್ಲದೇ ಕಾರಣರಾದವರ ತಲೆದಂಡ ಆಗಬೇಕು ಎಂದು ಪಟ್ಟು ಹಿಡಿದರು ಎಂದು ಗೊತ್ತಾಗಿದೆ.
‘ಸಾರ್ವಜನಿಕವಾಗಿ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಸಂತ್ರಸ್ತ ಕುಟುಂಬಗಳ ರೋದನ, ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ’ ಎಂದು ಸಚಿವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು ಎಂದು ಮೂಲಗಳು ತಿಳಿಸಿವೆ.
‘ಆಗ ಮಾತನಾಡಿದ ಸಿದ್ದರಾಮಯ್ಯ, ನನ್ನ ಅಧಿಕಾರದ ಅವಧಿಯಲ್ಲಿ ಇಂತಹದ್ದೊಂದು ದುರಂತ ಸಂಭವಿಸಿರಲಿಲ್ಲ. ನಿನ್ನೆಯ ಘಟನೆಯಿಂದ ತೀವ್ರ ಆಘಾತ ಆಗಿದೆ ಎಂದು ಸಿದ್ದರಾಮಯ್ಯ ಅವರೂ ತೀವ್ರ ನೋವು ತೋಡಿಕೊಂಡರು’ ಎಂದು ಮೂಲಗಳು ಹೇಳಿವೆ.
‘ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು’ ಎಂದು ಬಹುತೇಕ ಸಚಿವರು ಪಟ್ಟು ಹಿಡಿದಾಗ ಮುಖ್ಯಮಂತ್ರಿಯವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರೂ ಸೇರಿ ಹಿರಿಯ ಅಧಿಕಾರಿಗಳನ್ನು ಸಂಪುಟ ಸಭೆಗೆ ಕರೆಸಿಕೊಂಡರು.
‘ಇಷ್ಟೊಂದು ದೊಡ್ಡ ಘಟನೆ ಸಂಭವಿಸಿ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ಆಗಿರುವಾಗ ಆರ್ಸಿಬಿ ಆಡಳಿತ ಮಂಡಳಿ ಮತ್ತು ನಗರ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಆಗಲೇಬೇಕು ಎಂದು ಹಿರಿಯ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು’ ಎಂದು ಮೂಲಗಳು ಹೇಳಿವೆ.