Published
6 hours agoon
By
Akkare Newsಎಲೆಕ್ಟ್ರಾನಿಕ್ ಮತ ಯಂತ್ರಗಳು ಅಥವಾ ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ. ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆ ಮಾಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆದರೂ ಬಿಜೆಪಿಯೇತರ ಸರ್ಕಾರಗಳುಳ್ಳ ರಾಜ್ಯಗಳಲ್ಲಿ ಬ್ಯಾಲೆಟ್ ಪೇಪರ್ನತ್ತ ಹೆಚ್ಚು ಒಲವು ವ್ಯಕ್ತವಾಗುತ್ತಿದೆ.
ಹಾಗೆಯೇ, ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕವೂ ಕೂಡ.
ಇವಿಎಂಗಳು ಚುನಾವಣೆಗಳನ್ನು ಸುಲಭವಾಗಿ ಮತ್ತು ಟ್ಯಾಂಪರಿಂಗ್-ಪ್ರೂಫ್ ಆಗಿ ಮಾಡಬಹದು. ಆದರೆ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗಳನ್ನು ನಡೆಸಬೇಕು ಎಂಬ ಒತ್ತಾಯಗಳನ್ನು ಮಾಡುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ರಾಜ್ಯ ಚುನಾವಣಾ ಆಯೋಗವು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ಗಳ ಬಳಕೆಗೆ ಗಂಭೀರವಾಗಿ ಚಿಂತನೆ ನಡೆಸಿದೆ.
ಇವಿಎಂಗಳ ಬಗ್ಗೆ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ವಿವಾದ ಸೃಷ್ಟಿಯ ನಡುವೆ ಬ್ಯಾಲೆಟ್ ಪೇಪರ್ಗಳ ಬಳಕೆಗೆ ಮುಂದಾಗಿರುವ ರಾಜ್ಯ ಚುನಾವಣಾ ಆಯೋಗದ ನಡೆಯು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸಾಂಪ್ರದಾಯಿಕ ಮತಪತ್ರದ ಬಳಕೆಯು ಅಗ್ಗ ಮತ್ತು ರಾಜ್ಯಗಳಿಗೆ ಹೆಚ್ಚು ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಬಳಕೆಗೆ ಆಸಕ್ತಿ ತೋರಿವೆ.
ಸಾಮಾನ್ಯವಾಗಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಪ್ರತ್ಯೇಕವಾಗಿ ನಡೆಯುತ್ತಿದ್ದವು. ಆದರೆ, ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಚುನಾವಣೆಗಳನ್ನು ನಡೆಸಿಲ್ಲ. ಪರಿಣಾಮ ಇದೀಗ ಎರಡು ಒಟ್ಟಿಗೆ ನಡೆಸುವ ಪ್ರಮೇಯ ಎದುರಾಗಿದೆ. ಎರಡು ಒಟ್ಟಿಗೆ ಚುನಾವಣೆಗಳನ್ನು ನಡೆಸಲು ಅಷ್ಟು ಪ್ರಮಾಣದಲ್ಲಿ ಇವಿಎಂಗಳು ಲಭ್ಯವಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಇವಿಎಂಗಳನ್ನು ಕ್ರೋಢೀಕರೀಸುವುದು ಸಹ ಸುಲಭದ ಕೆಲಸವಲ್ಲ. ಹೀಗಾಗಿ ಬ್ಯಾಲೆಟ್ ಪೇಪರ್ ಮೊರೆ ಹೋಗುವುದು ಉತ್ತಮ ಎಂಬ ನಿಲುವು ರಾಜ್ಯ ಚುನಾವಣಾ ಆಯೋಗದ್ದಾಗಿದೆ.
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ಗಳನ್ನು ಬಳಕೆ ಮಾಡಲು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಸಹಮತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ 239 ತಾಲೂಕು ಪಂಚಾಯತ್ ಮತ್ತು 31 ಜಿಲ್ಲಾ ಪಂಚಾಯತ್ಗಳಿವೆ. ಇವುಗಳಿಗೆ ಮುಕ್ತ ಮತ್ತು ಪಾರದರ್ಶಕತೆಯಿಂದ ಚುನಾವಣೆ ನಡೆಸುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆಯಾದರೂ ರಾಜ್ಯ ಸರ್ಕಾರ ಮಾತ್ರ ಮನಸ್ಸು ಮಾಡುತ್ತಿಲ್ಲ. ಚುನಾವಣೆ ನಡೆಸುವ ಪ್ರಕ್ರಿಯೆಗೆ ಸರ್ಕಾರ ಮುಂದಾಗುತ್ತಿಲ್ಲ. ಇದು ಚುನಾವಣೆ ನಡೆಸಲು ಹಿನ್ನೆಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಜಿಲ್ಲಾ ಪುನರ್ ವಿಂಗಡಣಾ ಆಯೋಗದ ವರದಿ ದೊರೆಯುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಚುನಾವಣೆಗೆ ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಹೈಕೋರ್ಟ್ನಲ್ಲಿ ಸರ್ಕಾರ ಮೀಸಲಾತಿ ಹೊರಡಿಸುವ ಬಗ್ಗೆ ಭರವಸೆ ನೀಡಿದರೂ, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಆಯೋಗವು ಸಂಬಂಧಪಟ್ಟ ಇಲಾಖೆಗಳಿಗೆ ಮೀಸಲಾತಿ ಪಟ್ಟಿಗಳನ್ನು ನೀಡುವಂತೆ ತಿಳಿಸಲಾಗಿದೆ. ಅವುಗಳು ಸಹ ಸಿಕ್ಕಿಲ್ಲ. ಅವೆಲ್ಲಾ ಸಿಕ್ಕ ಕೂಡಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಲು ಆಯೋಗ ಸಜ್ಜಾಗಿದೆ.