Published
8 months agoon
By
Akkare News
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಮೊಬೈಲ್ ಬಳಕೆ, ಜಂಕ್ ಫುಡ್ ಸೇವನೆ ಮತ್ತು ದೈಹಿಕ ಚಟುವಟಿಕೆ ಇಲ್ಲದಿರುವುದು ಪ್ರಮುಖ ಕಾರಣ ಎಂದು ಹುಬ್ಬಳ್ಳಿಯ ಕೆಎಂಸಿಆರ್ಐ ವೈದ್ಯರ ತಂಡ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.
ರಾಜ್ಯ ಮಾತ್ರವಲ್ಲದೇ ದೇಶದ ವಿವಿಧೆಡೆಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು ಇತ್ತೀಚಿಗೆ ಹೆಚ್ಚಾಗಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಮೊಬೈಲ್ ಬಳಕೆ ಪ್ರಮುಖ ಕಾರಣ ಎಂಬ ಆಘಾತಕಾರಿ ಅಂಶ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್ಐ) ವೈದ್ಯರ ತಂಡ ನಡೆಸಿದ ಅಧ್ಯಯನದಿಂದ ಬೆಳಕಿಗೆ ಬಂದಿದೆ.
8 ಮತ್ತು 9ನೇ ತರಗತಿ ಅಧ್ಯಯನ ಮಾಡುತ್ತಿರುವ, ಬೊಜ್ಜು ಹೆಚ್ಚಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಧ್ಯಯನ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ದೈಹಿಕ ಚಟುವಟಿಕೆ ಇಲ್ಲದಿರುವುದು, ಮೊಬೈಲ್ನಲ್ಲಿಯೇ ಹೆಚ್ಚು ಸಮಯ ಕಾಲ ಕಳೆಯುವುದು ಮತ್ತು ಜಂಕ್ ಫುಡ್ ಸೇವನೆಯು ಮಕ್ಕಳ ಆರೋಗ್ಯವನ್ನೇ ಕಸಿದು ಕೊಂಡಿರುವುದು ಅಧ್ಯಯನದಲ್ಲಿ ಪತ್ತೆ ಆಗಿದೆ. ಅಧ್ಯಯನಕ್ಕೆ ಒಳಪಡಿಸಿದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲೇ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳ ಲಕ್ಷಣಗಳು ಪತ್ತೆ ಆಗಿವೆ. ವೈದ್ಯರು ಆ ವಿದ್ಯಾರ್ಥಿಗಳ ಪೋಷಕರಿಗೆ ಮಕ್ಕಳ ಆರೋಗ್ಯದ ಸ್ಥಿತಿಗತಿಯ ವರದಿ ನೀಡಿದ್ದಾರೆ. ಅಲ್ಲದೆ ಅವರ ಜೀವನ ಶೈಲಿಯಲ್ಲಿ ಮಾಡಲೇಬೇಕಾದ ಬದಲಾವಣೆಯನ್ನು ತಿಳಿಸಿಕೊಟ್ಟಿದ್ದಾರೆ.
ಕೆಎಂಸಿಆರ್ಐ ಆಸ್ಪತ್ರೆಯ ಬಹುವಿಭಾಗೀಯ ಸಂಶೋಧನಾ ಘಟಕದ ನೋಡಲ್ ಅಧಿಕಾರಿ ಡಾ। ರಾಮ ಕೌಲಗುಡ್ಡ, ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ। ಮಂಜುನಾಥ ನೇಕಾರ, ವಿಜ್ಞಾನಿಗಳಾದ ಡಾ। ಶಿವಕುಮಾರ ಬೇಲೂರ ಮತ್ತು ಡಾ। ಅರುಣ ಶೆಟ್ಟರ ಅವರ ತಂಡ ಮಕ್ಕಳ ಮೇಲೆ ಈ ಕುರಿತು ಅಧ್ಯಯನ ನಡೆಸಿದೆ.