Published
8 months agoon
By
Akkare News
ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರ ಜೊತೆ ನಾವಿದ್ದೇವೆ ಎಂದು ಸ್ಪಷ್ಟಪಡಿಸಿದ ಭಾರತೀಯ ಕಿಸಾನ್ ಯೂನಿಯನ್ (ಬಿ.ಕೆ.ಯು) ನಾಯಕ ರಾಕೇಶ್ ಟಿಕಾಯತ್, ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 4) ಫ್ರೀಡಂ ಪಾರ್ಕ್ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ನಿರ್ಧಾರವಾಗಲಿವೆ ಎಂದು ಹೇಳಿದರು.
ಕೃಷಿ ಭೂಮಿ ವಶಪಡಿಸಿಕೊಂಡರೆ, ರೈತರು ಬಡವರಾಗುತ್ತಾರೆ: “ನಗರ ಪ್ರದೇಶಗಳಲ್ಲಿ, ವಿಮಾನ ನಿಲ್ದಾಣಗಳಿಗೆ, ಕೈಗಾರಿಕೆಗಳಿಗೆ ಎಂದು ಸರ್ಕಾರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ. ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇದು ನಮಗೆ ಬೇಕಾಗಿದೆಯೇ? ಇದರ ವಿರುದ್ಧ ಹೋರಾಟ ಮುಂದುವರಿಸಬೇಕು,” ಎಂದು ಟಿಕಾಯತ್ ಪ್ರಶ್ನಿಸಿದರು.
ಕೈಗಾರಿಕೆಗಳಿಗೆ ಈಗಾಗಲೇ ನೀಡಿರುವ ಭೂಮಿಯನ್ನು ವಾಪಸ್ ಪಡೆದು ಅಲ್ಲಿ ಬೆಳೆ ಬೆಳೆಯುತ್ತೇವೆಂದರೆ ಸರ್ಕಾರ ಕೊಡುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸರ್ಕಾರ ಭೂಮಿಯನ್ನು ಖಾಸಗಿ ಮಾಲೀಕರಿಗೆ (ಮಾಲಕರಿಗೆ) ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಈ ಹಿಂದೆ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದವರು ಈಗ ಅಧಿಕಾರಕ್ಕೆ ಬಂದ ನಂತರ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಒಪ್ಪಬಾರದು ಎಂದೂ ಟಿಕಾಯತ್ ಟೀಕಿಸಿದರು.