Connect with us

ಇತರ

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

Published

on

ಬೆಂಗಳೂರು: 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಒಳಗೊಂಡಂತೆ ಧರ್ಮಸ್ಥಳದಲ್ಲಿ ನಡೆದ ಹಲವು ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ “ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ” ವೇದಿಕೆಯು ಇಂದು ಪತ್ರಿಕಾಗೋಷ್ಠಿ ನಡೆಸಿತು. ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ (SIT) ರಚಿಸಿರುವುದನ್ನು ಸ್ವಾಗತಿಸಿದ ವೇದಿಕೆಯು, ಅಪರಾಧಿಗಳಿಗೆ ಕಠಿಣ ಶಿಕ್ಷೆ ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿತು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಮಹಿಳಾ ಕಾರ್ಮಿಕರು ಮತ್ತು ಅಂಚಿಗೊತ್ತಲ್ಪಟ್ಟ ಮಹಿಳೆಯರ ಹಲವು ಸಂಘಟನೆಗಳು, ಮಾನವ ಹಕ್ಕು ಸಂಘಟನೆಗಳು ಮತ್ತು ಕಾಳಜಿಯುಳ್ಳ ನಾಗರಿಕರ ಜಂಟಿ ವೇದಿಕೆಯಾದ “ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ”ವು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವುದು ಮತ್ತು ಅವರ ಹಕ್ಕುಗಳನ್ನು ಸಂರಕ್ಷಿಸುವುದು ತಮ್ಮ ಪ್ರಮುಖ ಉದ್ದೇಶ ಎಂದು ತಿಳಿಸಿದೆ.

SIT ರಚನೆ ಸ್ವಾಗತ, ನಿಷ್ಪಕ್ಷ ತನಿಖೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದ ಘಟನೆಗಳ ಬಗ್ಗೆ ಸಾಕ್ಷ್ಯ ನೀಡಲು ಮುಂದೆ ಬಂದಿರುವ ದೇವಾಲಯದ ಮಾಜಿ ಉದ್ಯೋಗಿಯ ಧೈರ್ಯವನ್ನು ವೇದಿಕೆಯು ಶ್ಲಾಘಿಸಿತು. ರಾಜ್ಯ ಸರ್ಕಾರವು SIT ರಚನೆ ಮಾಡಿರುವುದನ್ನು ಸ್ವಾಗತಿಸಿದರೂ, ಈ ಪ್ರಕರಣದಲ್ಲಿ ಆರೋಪಿಗಳ ಬಲಾಢ್ಯ ಹಿನ್ನೆಲೆ ಮತ್ತು ಹಿಂದಿನ ಸರ್ಕಾರಗಳ ಹಿಂಜರಿಕೆಯನ್ನು ಗಮನದಲ್ಲಿಟ್ಟುಕೊಂಡು, ತನಿಖಾ ದಳವು ಯಾವುದೇ ಒತ್ತಡಕ್ಕೆ ಒಳಗಾಗದೆ ಅತ್ಯಂತ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿತು. ದಶಕಗಳ ಕಾಲ ನಡೆದಿದೆ ಎನ್ನಲಾದ ಈ ವ್ಯವಸ್ಥಿತ ಅಪರಾಧ ಸರಣಿಯಲ್ಲಿ, ಅಪರಾಧಿಗಳು ಯಾರೇ ಆಗಿರಲಿ, ಅವರನ್ನು ಕಾನೂನಿನ ಕಟಕಟೆಗೆ ತರಬೇಕು ಎಂದು ವೇದಿಕೆಯು ಆಗ್ರಹಿಸಿತು. ಈ ತನಿಖೆಯಿಂದ ಸತ್ಯ ಬೆಳಕಿಗೆ ಬಂದು ಸಂತ್ರಸ್ತರಿಗೆ ನ್ಯಾಯ ದೊರೆತರೆ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಸರ್ಕಾರವು ಸಮಾಜಕ್ಕೆ ಬಲವಾದ ಸಂದೇಶ ನೀಡಿದಂತಾಗುತ್ತದೆ ಎಂದು ವೇದಿಕೆಯು ಅಭಿಪ್ರಾಯಪಟ್ಟಿತು.


ಸಾಕ್ಷಿಗಳಿಗೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ರಕ್ಷಣೆ

ಪ್ರಕರಣದ ಸಾಕ್ಷಿಗಳಿಗೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ರಕ್ಷಣೆ ನೀಡುವಂತೆ ವೇದಿಕೆಯು ಆಗ್ರಹಿಸಿತು. ವಿಶೇಷವಾಗಿ 1995ರಿಂದ 2014ರವರೆಗೆ ನಡೆದ ಭೀಕರ ಅಪರಾಧಗಳಿಗೆ ಸಾಕ್ಷಿಯಾಗಿರುವ ದೇವಾಲಯದ ಮಾಜಿ ಉದ್ಯೋಗಿ ಮತ್ತು ಅವರ ಕುಟುಂಬಕ್ಕೆ 2018ರ ಸಾಕ್ಷಿಗಳ ರಕ್ಷಣಾ ಯೋಜನೆಯಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿತು. ಅಲ್ಲದೆ, ಅನನ್ಯಾ ಭಟ್ (2003ರಲ್ಲಿ ಕಾಣೆಯಾದ ವೈದ್ಯಕೀಯ ವಿದ್ಯಾರ್ಥಿನಿ) ಮತ್ತು ಸೌಜನ್ಯಾ (2012ರಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ಬಾಲಕಿ) ರಂತಹ ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ನೀಡಬೇಕೆಂದು ಕೋರಿತು.

.

ಯಾವುದೇ ಕುಟುಂಬ ದೌರ್ಜನ್ಯಕ್ಕೆ ಒಳಗಾಗಿದ್ದು, ದೂರು ದಾಖಲಿಸಲು ಬಯಸಿದರೆ, ಅವರ ಮಾಹಿತಿ ಗೋಪ್ಯವಾಗಿಟ್ಟು, ಸಂಪೂರ್ಣ ರಕ್ಷಣೆ ಒದಗಿಸುವ ಕುರಿತು ವಿಶ್ವಾಸ ಮೂಡಿಸುವಂತೆ SIT ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ವೇದಿಕೆಯು ತಿಳಿಸಿತು.
ಕಳೆದ ಕೆಲವು ದಶಕಗಳಿಂದ ಧರ್ಮಸ್ಥಳದಲ್ಲಿ ಇಂತಹ ಆರೋಪಗಳು ಹೊರಬಂದಾಗಲೂ ಹಿಂದಿನ ಸರ್ಕಾರಗಳು ಸಮರ್ಪಕ ಕ್ರಮ ಕೈಗೊಳ್ಳದಿರುವುದು ದೊಡ್ಡ ಸಂಖ್ಯೆಯ ಅಮಾಯಕ ಹೆಣ್ಣುಮಕ್ಕಳ ದುರಂತ ಸಾವಿಗೆ ಕಾರಣವಾಗಿದೆ ಎಂದು ವೇದಿಕೆಯು ಖಂಡಿಸಿತು. ಈ ತಪ್ಪಿನ ಸಂಪೂರ್ಣ ಹೊಣೆಯನ್ನು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಹೊರಬೇಕು ಎಂದು ಅಭಿಪ್ರಾಯಪಟ್ಟಿತು. ಪ್ರಸ್ತುತ ಸರ್ಕಾರ ಈ ತಪ್ಪಿಗೆ ಪ್ರಾಯಶ್ಚಿತ್ತವೆಂದು ಭಾವಿಸಿ, ಸತ್ಯವನ್ನು ಬೆಳಕಿಗೆ ತರುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಆಗ್ರಹಿಸಿತು. ಸೌಜನ್ಯಾ ಪ್ರಕರಣದ ತನಿಖೆಯನ್ನು ದಿಕ್ಕುತಪ್ಪಿಸಿದ ಪೊಲೀಸ್ ತನಿಖಾಧಿಕಾರಿಗಳ ಮೇಲೆ ಕ್ರಮ ಕೈಗೊಂಡು, ಪ್ರಕರಣದ ಮರುತನಿಖೆಗೆ ಆದೇಶಿಸಬೇಕು ಎಂದು ಸಿಬಿಐ ನ್ಯಾಯಾಲಯ ಸೂಚಿಸಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವೇದಿಕೆಯು ಗಮನ ಸೆಳೆಯಿತು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version