Published
7 months agoon
By
Akkare News
ಮಂಗಳೂರು: ಲಕ್ಕಿ ಸ್ಕೀಮ್ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ ವಂಚಿಸಿದ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯೂ ಶೈ ನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ ಮಚಿಸಿದ್ದ ಕಾಟಿಪಳ್ಳ ಒಂದನೇ ಬ್ಲಾಕ್ ಮಹಾಕಾಳ ದೈವಸ್ಥಾನ ಬಳಿಯ ನಿವಾಸಿ ಅಹ್ಮದ್ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್ ಕೋರ್ದಬ್ಬು ದ್ವಾರದ ಬಳಿಯ ನಿವಾಸಿ ನಝೀರ್ ಯಾನೆ ನಾಸೀರ್ (39) ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಟೀಮ್ ಗ್ರೀನ್ ಲೈಟ್ ಲಕ್ಕಿ ಸ್ಟೀಮ್ ನಲ್ಲಿ ವಂಚನೆ ಮಾಡಿದ್ದ ಬಜಪೆ ನಿವಾಸಿ ಮುಹಮ್ಮದ್ ಅಶ್ರಫ್ (43), ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮುಹಮ್ಮದ್ ಹನೀಫ್ (50) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘
ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಹೆಸರಲ್ಲಿ ಬಂಪರ್ ಬಹುಮಾನ ಕಾರು, ಬೈಕ್, ಫ್ಲಾಟ್, ಸೈಟ್, ಚಿನ್ನ ಕೊಡುವುದಾಗಿ ನಂಬಿಸಿ 9 ತಿಂಗಳು 1 ಸಾವಿರ ರೂ. ಮತ್ತು ಕೊನೆಯ 2 ತಿಂಗಳು 1,500 ರೂ. ನಂತೆ ಸುಮಾರು 11ತಿಂಗಳ ಕಾಲ ಆರೋಪಿಗಳು ಹಣ ಕಟ್ಟಿಕೊಂಡಿದ್ದರು. ದ.ಕ. ಹಾಗೂ ಉಡುಪಿ ಜಿಲ್ಲೆಯ ಸುಮಾರು 3 ಸಾವಿರ ಮಂದಿಗೆ ಸ್ಟ್ರೀಮ್ ಮುಗಿದ ಬಳಿಕ ಬಹುಮಾನ ಅಥವಾ ಕಟ್ಟಿದ ಹಣವನ್ನು ಆರೋಪಿಗಳು ಹಿಂದಿರುಗಿಸುವ ವಾಗ್ದಾನ ನೀಡಿದ್ದರು. ಆದರೆ ಹಣ ಮತ್ತು ಬಹುಮಾನವನ್ನು ನೀಡದೆ 4.20 ಕೋಟಿಗೂ ಅಧಿಕ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್ ಸೂರಿಂಜೆ ನಿವಾಸಿ ಶಿವಪ್ರಸಾದ್ ಎಂಬವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಸುರತ್ಕಲ್ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಆ.25ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
‘ಆರೋಪಿಗಳು ವ್ಯವಹಾರ ನಡೆಸಿದ್ದ ಆಯಿಷಾ ಕಾಂಪ್ಲೆಕ್ಸ್ನ ಕಚೇರಿ, ಬಿ.ಎಂ.ಆರ್ ಕಾಂಪ್ಲೆಕ್ಸ್ ಕಚೇರಿ ಹಾಗೂ ಶೈನ್ ಮಾರ್ಟ್ ಕಚೇರಿಯಲ್ಲಿ ಕೃತ್ಯಕ್ಕೆ ಉಪಯೋಗಿಸಿದ ಕಂಪ್ಯೂಟರ್ ಉಪಕರಣಗಳು, ಡ್ರಾ ಕಾಯಿನ್, ಲಕ್ಕಿ ಡ್ರಾ ಪೆಟ್ಟಿಗೆ, ರಿಜಿಸ್ಟರ್ ಗಳು, ಡಿವಿಆರ್ ಆರೋಪಿಗಳ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳು, ಚಿನ್ನಾಭರಣಗಳ ಖರೀದಿ, ನಿವೇಶನ, ವಾಹನ ಖರೀದಿ, ಮನೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
‘
ಬಂಧಿತ ಆರೋಪಿಗಳ ಪೈಕಿ ಅಹ್ಮದ್ ಖುರೇಶಿ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣಗಳು ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರನಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ 1 ಪ್ರಕರಣ ದಾಖಲಾಗಿರುತ್ತದೆ. ಆರೋಪಿ ನಝೀರ್ ಯಾನೆ ನಾಸಿರ್ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದು ಸ್ಕೀಮ್ ವಂಚನೆ ಪ್ರಕರಣದಲ್ಲಿ ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಗ್ರೀನ್ ಲೈಟ್ ಲಕ್ಕಿ ಸ್ಟೀಮ್ ಹೆಸರಲ್ಲಿ ಆಕರ್ಷಕ ಬಹುಮಾನ, ಬಂಪರ್ ಬಹುಮಾನಗಳಾದ ಕಾರು, ಬೈಕು, ಫ್ಲಾಟ್, ಸೈಟ್, ಚಿನ್ನದ ಉಂಗುರ ಮತ್ತು ನಗದನ್ನು ನೀಡುವುದಾಗಿ ನಂಬಿಸಿ ಪ್ರತೀ ತಿಂಗಳು 1,000 ರೂ.ನಂತೆ 1 ವರ್ಷದ ಅವಧಿಗೆ ಹಣ ಕಟ್ಟಿಸಿಕೊಂಡು ಮೋಸ ಮಾಡಿದ್ದಾರೆ. ಈ ಸ್ಕೀಮ್ ಗೆ ದ.ಕ, ಉಡುಪಿ ಜಿಲ್ಲೆಯ ಸುಮಾರು 13 ಸಾವಿರ ಜನರಿಗೆ ಲಕ್ಕಿ ಸ್ಕೀಮ್ ಕಂತು ಮುಗಿದ ನಂತರ ಡೆಪಾಸಿಟ್ ಮಾಡಿದ ಹಣ ಅಥವಾ ಬಹುಮಾನಗಳನ್ನು ನೀಡದೆ ವಂಚಿಸಲಾಗಿದೆ ಎಂದು ಭುಬಂಗ ಎ. ಪೂಜಾರಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು.