Connect with us

ಇತ್ತೀಚಿನ ಸುದ್ದಿಗಳು

ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಹೊಸ ರೂಲ್ಸ್

Published

on

ಬೆಂಗಳೂರು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ.

ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ, ಐದು ವಾಹನಗಳು ಒಟ್ಟಾಗಿ ಹೊರಡುವಂತೆ ವ್ಯವಸ್ಥೆ ರೂಪಿಸಲಾಗಿದೆ
ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಬ್ಯಾರಿಯರ್ ನಿರ್ಮಿಸಲಾಗುತ್ತಿದೆ. ರಾತ್ರಿ ವೇಳೆ ಒಬ್ಬ ಪಿಎಸ್ ಐ ನೇತೃತ್ವದಲ್ಲಿ ಪೊಲೀಸರು ಕಾವಲು ನಿಲ್ಲಲಿದ್ದಾರೆ. ಜತೆಗೆ ಚೆಕ್ ಪೋಸ್ಟ್‌ನಿಂದ ಒಂದೂವರೆ ಕಿಮೀ ದೂರದಲ್ಲಿ ಇರುವ ಕಚ್ಚಾ ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರೆಂಬ ದೂರು ಬಂದ ಹಿನ್ನೆಲೆಯಲ್ಲಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಗೇಟ್ ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಮುಚ್ಚಿರಲಿದೆ. ಈ ನೂತನ ಸಂಚಾರ ವ್ಯವಸ್ಥೆ ಈಗಾಗಲೇ ಜಾರಿಗೆ ಬಂದಿದೆ.

ಘಾಟಿಯಲ್ಲಿ ವಿಪರೀತ ಮಂಜಿನ ವಾತಾವರಣ, ಕಾಡಾನೆ ಸಹಿತ ವನ್ಯ ಮೃಗಗಳ ತಿರುಗಾಟ, ಮರ ಗೆಲ್ಲುಗಳು ಬಿದ್ದು ಸಂಚಾರ ವ್ಯತ್ಯಯ ಉಂಟಾಗುವುದು, ಅಪಘಾತ ನಡೆಯುವ ಸಂದರ್ಭಗಳಲ್ಲಿ ,ಮೊಬೈಲ್ ನೆಟ್ವರ್ಕ್ ಇಲ್ಲದಿರುವುದು ಇತ್ಯಾದಿ ಕಾರಣಗಳಿಗೆ ಈ ವ್ಯವಸ್ಥೆ ಉತ್ತಮವಾಗಿದೆ. ದಕ ಜಿಲ್ಲೆಯ ಕೊನೆಯ ಭಾಗವಾದ ಚಾರ್ಮಾಡಿಯಲ್ಲಿಯೂ ಪೋಲಿಸ್ ಚೆಕ್ ಪೋಸ್ಟ್ ಇದೆ. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ. ಇಲ್ಲಿಂದ ಚಿಕ್ಕಮಗಳೂರು ಕಡೆ ಸಾಗುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಆದರೆ ಇಲ್ಲಿ ರಾತ್ರಿ ವೇಳೆ ಐದು ವಾಹನಗಳಿಗೆ ಏಕಕಾಲದಲ್ಲಿ ಪ್ರವೇಶಿಸುವ ನಿಯಮವನ್ನು ಸದ್ಯಕ್ಕೆ ರೂಪಿಸಲಾಗಿಲ್ಲ.

 

Continue Reading
Click to comment

Leave a Reply

Your email address will not be published. Required fields are marked *

Advertisement