Published
6 months agoon
By
Akkare News
ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆಗಸ್ಟ್ 29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಹಿಂದೆ, ಪ್ರಕರಣದ ಮೊದಲ ಆರೋಪಿ ಗಿರೀಶ್ ಮಟ್ಟಣ್ಣವರ್ ಮತ್ತು ಎರಡನೇ ಆರೋಪಿ ಜಯಂತ್ ಟಿ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ಹೇಳಿಕೆ ನೀಡಿ ಹೋಗಿದ್ದರು. ಇದೀಗ ಮೂರನೇ ಆರೋಪಿ ತಿಮರೋಡಿ ಅವರು ಸಾಕ್ಷಿ ದೂರುದಾರ ಹಾಗೂ ತಮ್ಮ ವಕೀಲರ ಜೊತೆ ಎಸ್ಐಟಿ (ವಿಶೇಷ ತನಿಖಾ ತಂಡ) ಆಗಮಿಸುತ್ತಿದ್ದ ಕಾರಿನಲ್ಲೇ ಠಾಣೆಗೆ ಆಗಮಿಸಿದರು.
ದೂರಿನಲ್ಲಿ, ಬ್ರಹ್ಮಾವರ ಪೊಲೀಸ್ ಠಾಣೆಯ ಅ.ಕ್ರ.
177/2025, ಕಾಲಂ 196(1) (ಎ) ಬಿಎನ್ಎಸ್ ಪ್ರಕರಣದ ತನಿಖಾಧಿಕಾರಿಯಾಗಿರುವ ಪೊಲೀಸ್ ಉಪ ನಿರೀಕ್ಷಕರು (ಕಾನೂನು & ಸುವ್ಯವಸ್ಥೆ), ಪ್ರಕರಣದಲ್ಲಿ ಆಪಾದಿತನಾದ ಮಹೇಶ್ ಶೆಟ್ಟಿ ತಿಮರೋಡಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ, ಮೇಲಾಧಿಕಾರಿಗಳ ಸೂಚನೆಯ ಮೇರೆಗೆ ಅವರನ್ನು ದಸ್ತಗಿರಿ ಮಾಡಲು ಆಗಸ್ಟ್ 21 ರಂದು ಬೆಳಗ್ಗೆ ಇಲಾಖಾ ಮೇಲಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿ, ಉಜಿರೆ ಗ್ರಾಮದ ತಿಮರೋಡಿ ಮನೆಗೆ ತೆರಳಿದ್ದರು.
ಈ ವೇಳೆ ಆಪಾದಿತನ ಮನೆಯಲ್ಲಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್ ಹಾಗೂ ಇತರ 7 ರಿಂದ 10 ಜನರು ತಿಮರೋಡಿಯನ್ನು ದಸ್ತಗಿರಿ ಮಾಡಲು ತಡೆಯೊಡ್ಡಿದರು. ಸ್ಥಳದಲ್ಲಿ ಹೆಚ್ಚಿನ ಜನರನ್ನು ಸೇರಿಸಿ, ಇಲಾಖಾ ಕರ್ತವ್ಯ ನಿರ್ವಹಿಸದಂತೆ ಬಲಪ್ರಯೋಗ ನಡೆಸಿ ಅಡ್ಡಿಪಡಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಆದ್ರೆ ದಸ್ತಗಿರಿ ಮಾಡಿದ ನಂತರ, ಆಪಾದಿತನು ಇಲಾಖಾ ಜೀಪಿನಲ್ಲಿ ಬರಲು ನಿರಾಕರಿಸಿ, ತನ್ನ ಖಾಸಗಿ ಕಾರಿನಲ್ಲಿ ಬಂದಿದ್ದು, ಆ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು, ಸುಮಾರು 10 ರಿಂದ 15 ಕಾರುಗಳನ್ನು ಹಿಂಬಾಲಿಸಿಕೊಂಡು ಬಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.