Published
5 months agoon
By
Akkare News
ಬೆಂಗಳೂರು: ಸ್ವಾಧೀನಾನುಭವ ಪತ್ರ (ಸಿ.ಸಿ) ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ (ಒಸಿ) ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ನೀಡುವ ಬಗ್ಗೆ ಅಕ್ಟೋಬರ್ 8ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ರೇಟರ್ ಬೆಂಗಳೂರು ಹಾಗೂ ರಾಜ್ಯದ ಜಿಲ್ಲೆಗಳಲ್ಲಿ ಸಿಸಿ ಮತ್ತು ಒಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಸೋಮವಾರ ಚರ್ಚೆ ನಡೆಸಿದರು.
ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮೊದಲು ಸಲ್ಲಿಕೆಯಾಗಿರುವ (2025ರ ಮಾರ್ಚ್ವರೆಗಿನ) ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯಿತಿ ನೀಡಿ, ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಗುವುದು. ಮುಖ್ಯ ಕಾರ್ಯದರ್ಶಿ, ಸಂಬಂಧಪಟ್ಟ ಇಲಾಖಾ ಸಚಿವರು, ಅಡ್ವೊಕೇಟ್ ಜನರಲ್, ಕಾನೂನು ಸಲಹೆಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲ ರಾಜ್ಯಗಳೂ ಅನುಷ್ಠಾನಗೊಳಿಸುತ್ತಿವೆಯೇ ಎಂಬುದನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯಿತು. ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ. ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು ಎಂದು ಸಭೆ ಅಭಿಪ್ರಾಯಪಟ್ಟಿತು.
ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ಜನರು ವಾಸವಿದ್ದಾರೆ. ಅಂತಹವರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ನಿಯಮಿತಗೊಳಿಸಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆಯೂ ಚರ್ಚೆ ನಡೆಸಲಾಯಿತು.


3 ಲಕ್ಷ ಅರ್ಜಿ ಬಾಕಿ
ಸಿಸಿ ಮತ್ತು ಒಸಿ ಸಮಸ್ಯೆಯಿಂದಾಗಿ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ 3.40 ಲಕ್ಷ ಕಟ್ಟಡಗಳಿಗೆ ವಿದ್ಯುತ್ ನೀಡಿಲ್ಲ. ಬೆಂಗಳೂರು ನಗರ ಒಂದರಲ್ಲೇ 53 ಸಾವಿರ ವಸತಿ ಕಟ್ಟಡ ಸೇರಿ 86 ಸಾವಿರ ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿವೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಕಾರಣ ನೀಡಿ ಮಾರ್ಚ್ನಿಂದ ಒಸಿ ಸಿಸಿ ಇಲ್ಲದ ಕಾರಣ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿಲ್ಲ. ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ಎರಡು ಅಂತಸ್ತಿನವರೆಗೆ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ಸರ್ಕಾರ ವಿನಾಯಿತಿ ನೀಡಿದೆ.


