Published
10 months agoon
By
Akkare News
ಅಕ್ಟೋಬರ್ 08: ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ರಾಜ್ಯದ ಉಳಿದೆಡೆ ನಾಳೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆಯಾಗಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳಿವೆ.


ರಾಜಧಾನಿ ಬೆಂಗಳೂರಲ್ಲೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಎಲ್ಲೆಲ್ಲಿ ಮಳೆ?
ರಾಮನಗರ, ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಮಂಡ್ಯ, ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳ ಬಹುತೇಕ ಪ್ರದೇಶಗಳು ಮೋಡದಿಂದ ಕೂಡಿರಲಿದ್ದು, 5 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಗದಗದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಕಲ್ಯಾಣ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, 10 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಅಂದಾಜಿಸಲಾಗಿದೆ.
ಮುಂದಿನ 2-3 ದಿನ ಬೆಂಗಳೂರಲ್ಲಿ ಮಳೆ
ಇಂದು ಬೆಳಗ್ಗೆಯಿಂದ ಬಿಟ್ಟು ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದಿನ 2-3 ದಿನಗಳವರೆಗೆ ಮುಂದುವರಿಯಲಿದೆ. ನಾಳೆ ಬೆಳಿಗ್ಗೆ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡುಬಂದರೂ ಮಧ್ಯಾಹ್ನ 2 ಗಂಟೆ ಬಳಿಕ ಅಥವಾ ಸಂಜೆ ಹೊತ್ತಿಗೆ ಬೆಂಗಳೂರಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಗುಡುಗು-ಗಾಳಿ ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ನಾಳೆ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.



