Connect with us

ಇತರ

ಜಿಲ್ಲಾ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ: ಟಿಕೆಟ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ಡಿಕೆ ಶಿವಕುಮಾರ್

Published

on

ಬೆಂಗಳೂರು, ನವೆಂಬರ್‌ 19: ಸದ್ಯದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ದರಾಗಿ. ಈಗ ಹೊಸ ಮತದಾರರ ಪಟ್ಟಿ ರಚನೆಯಾಗಲಿದೆ. ಕೂಡಲೇ ಮನೆ ಮನೆಗೆ ಹೋಗಿ ಖಾತಾ ಯೋಜನೆ, ಆಸ್ತಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ ಪ್ರಚಾರ ಮಾಡಬೇಕು ಎಂದು ಕರೆ ನೀಡಿದರು. ರಾಜಕೀಯದಲ್ಲಿ 33% ಮೀಸಲಾತಿ ಬರುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಾವು ಮಹಿಳಾ ನಾಯಕತ್ವವನ್ನು ಬೆಳೆಸಬೇಕು. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕ. ನಾಯಕರ ಕುಟುಂಬದವರನ್ನು ನಾಯಕರಾಗಿ ಬೆಳೆಯುವುದು ಮುಖ್ಯವಲ್ಲ, ಹೊಸ ಪ್ರತಿಭೆಗಳನ್ನು ಗುರುತಿಸಿ ಬೆಳೆಸಬೇಕು. ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್ ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ನಮ್ಮ ನಾಯಕರು ಮತಕಳ್ಳತನದ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಸಹಿ ಸಂಗ್ರಹ ಅಭಿಯಾನ ಮಾಡಿದ್ದೇವೆ. ಬಿಹಾರ, ಮಹಾರಾಷ್ಟ್ರ ಚುನಾವಣೆಗಳಲ್ಲಿ ಏನು ಹೆಚ್ಚುಕಮ್ಮಿಯಾಗಿದೆ ಎಂದು ಜನ ಚರ್ಚೆ ಮಾಡುತ್ತಿದ್ದಾರೆ. ಎಲ್ಲದಕ್ಕೂ ಕೊನೆ ಎಂಬುದು ಇದ್ದೇ ಇರುತ್ತದೆ. ನಾನು ಎಲ್ಲಿರುತ್ತೇನೆ ಎಂಬುದು ಮುಖ್ಯವಲ್ಲ. ಈ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ.

ಅನೇಕ ನಿಗಮಮಂಡಳಿ ನಿರ್ದೇಶಕರ ಪಟ್ಟಿ ಸಿದ್ಧವಾಗಿದ್ದು, ಮರುಪರಿಶೀಲನೆ ಮಾಡಿಸಿ, ಬ್ಲಾಕ್ ಅಧ್ಯಕ್ಷರಿಗೆ ಅಧಿಕಾರ ಕೊಡಬೇಕಾಗಿದೆ. ಪಕ್ಷದ ಸದಸ್ಯತ್ವ ನೋಂದಣಿಯಲ್ಲಿ ಹೆಚ್ಚು ಸಹಿ ಸದಸ್ಯತ್ವ ಮಾಡಿಸಿದ ಹೊಳಲ್ಕೆರೆಯ ಸವಿತಾ ಎಂಬಾಕೆಗೆ ಅಧ್ಯಕ್ಷ ಸ್ಥಾನ ಕೊಡಿಸಿದ್ದೆ. ಆಕೆ ಅಧಿಕಾರವನ್ನು ತನ್ನ ಗಂಡನಿಗೆ ಬಿಟ್ಟುಕೊಟ್ಟಿದ್ದಾಳೆ. ಅದಕ್ಕಾಗಿ ಎನ್ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಿದ್ದೇವೆ. ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಗ್ಯಾರಂಟಿ ಸಮಿತಿಗಳ ಮೂಲಕ ಪ್ರತಿ ಸಮಿತಿಯಲ್ಲಿ 15 ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಇಡೀ ದೇಶದಲ್ಲಿ ಕಾರ್ಯಕರ್ತರಿಗೆ ಈ ರೀತಿ ಅಧಿಕಾರ ನೀಡಿರುವುದು ನಮ್ಮಲ್ಲಿ ಮಾತ್ರ ಎಂದರು.

ಕಾಂಗ್ರೆಸ್ ಸರ್ಕಾರ ಆಧಾರ್ ಕಾರ್ಡ್ ಜಾರಿಗೆ ತಂದಾಗ ಬಹಳಷ್ಟು ಟೀಕೆ ಮಾಡಿದರು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅದಿಕಾರಕ್ಕೆ ಬಂದಂತೆ. ಇಂದಿರಾ ಗಾಂಧಿ ಅವರ ನುಡಿಮುತ್ತುಗಳನ್ನು ಸಂಗ್ರಹಿಸಿ ಸೋನಿಯಾ ಗಾಂಧಿ ಅವರು ಪುಸ್ತಕ ಬರೆದಿದ್ದರು. ಅದನ್ನು ನಾನು ಕನ್ನಡದಲ್ಲಿ ಅನುವಾದ ಮಾಡಿ ಪುಸ್ತಕ ಮಾಡಿ, ಇಂದು ಬಿಡುಗಡೆ ಮಾಡಿಸಿದ್ದೇನೆ ಎಂದರು.

ಸವಾಲುಗಳು ನಮ್ಮ ಮನೆ ಬಾಗಿಲ ಮುಂದೆ ಕಾದು ಕುಳಿತಿರುತ್ತವೆ. ನಾವು ಪರ್ವತಗಳನ್ನು ಏರಬೇಕಿಲ್ಲ, ಸಾಗರಗಳನ್ನು ದಾಟಬೇಕಿಲ್ಲ. ನಮ್ಮ ಹಳ್ಳಿಗಳಲ್ಲಿ ಬಡತನ, ಪ್ರತಿ ಮನೆಯಲ್ಲಿ ಜಾತಿಯತೆ ಇದೆ. ನಾವು ಏರಬೇಕಾಗಿರುವುದು ದಾಟಬೇಕಾಗಿರುವುದು ಇವುಗಳನ್ನು ಎಂದು ಇಂದಿರಾ ಗಾಂಧಿ ಅವರು ತಿಳಿಸಿದ್ದಾರೆ. ಗೌರವ ಎಂಬುದು ಕೇಳಿ ಪಡೆಯುವಂತಹುದಲ್ಲ, ಗಳಿಸುವಂತಹದ್ದು. ಪ್ರೀತಿ ಕೊಡುವಂತಹದ್ದು, ಬಲವಂತವಾಗಿ ಪಡೆಯುವಂತಹದ್ದಲ್ಲ. ಜೀವನ ಅನುಭವಿಸುವಂತಹದ್ದು, ವಿವರಿಸುವಂತಹದ್ದಲ್ಲ ಎಂದು ಇಂದಿರಾ ಗಾಂಧಿ ಅವರು ತಿಳಿಸಿದ್ದಾರೆ.

ಇಂದಿರಾ ಗಾಂಧಿ ಅವರ ನಾಯಕತ್ವ ದೇಶ ಹಾಗೂ ಪಕ್ಷ ಮರೆಯಲು ಸಾಧ್ಯವಿಲ್ಲ. ಎದುರಾಳಿ ನಿನ್ನನ್ನು ನಿಯಂತ್ರಿಸುವ ಮುನ್ನ, ನೀನು ನಿನ್ನನ್ನು ನಿಯಂತ್ರಿಸಬೇಕು ಎಂದು ಇಂದಿರಾ ಗಾಂಧಿ ಅವರು ಹೇಳುತ್ತಾರೆ. ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ ಗಾಂಧಿ ಅವರು ಹೇಳುತ್ತಾರೆ” ಎಂದು ಇಂದಿರಾ ಗಾಂಧಿ ಅವರ ಸಂದೇಶಗಳನ್ನು ಉಲ್ಲೇಖಿಸಿದರು. ಮಹಾಲಕ್ಷ್ಮಿಯ ಮತ್ತೊಂದು ಹೆಸರು ಇಂದಿರಾ. ಇಂದಿರಾ ಗಾಂಧಿ ಶತಮಾನ ಕಂಡ ಅತ್ಯುತ್ತಮ ನಾಯಕಿ, ಹಾಗೂ ವಿಶ್ವ ಕಂಡ ಶ್ರೇಷ್ಠ ಮಹಿಳಾ ಪ್ರಧಾನಿ. ಅವರ ಆಡಳಿತದಲ್ಲಿ ಪಾಕಿಸ್ತಾನವನ್ನು ಇಬ್ಭಾಗ ಮಾಡಿ ಬಾಂಗ್ಲಾದೇಶ ರಚನೆಗೆ ಕಾರಣರಾದರು. ಅವರ ನೀತಿಯಿಂದ ನಮ್ಮ ನೆರೆಯ ರಾಷ್ಟ್ರಗಳು ಸೇರಿದಂತೆ ವಿಶ್ವದ ಎಲ್ಲಾ ರಾಷ್ಟ್ರಗಳು ನಮ್ಮ ಮಿತ್ರರಾಗಿದ್ದವು. ಆದರೆ ಈಗ ನಮ್ಮ ನೆರೆ ರಾಷ್ಟ್ರಗಳಾದ ಭೂತಾನ್, ಬರ್ಮಾ ದೇಶಗಳು ನಮ್ಮ ಜೊತೆ ನಿಲ್ಲುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಕರೆದರು. ಅಟಲ್ ಬಿಹಾರಿ ವಾಜಪೇಯಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾಗ ಅವರನ್ನು ವಿದೇಶಕ್ಕೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದರು. ಇದು ಕಾಂಗ್ರೆಸ್ ಮುಖಂಡರಿಗೆ ಇದ್ದ ಹೃದಯ ವೈಶಾಲ್ಯತೆ ಎಂದು ಶ್ಲಾಘಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version