Published
3 months agoon
By
Akkare News
ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ.
ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು.
ಆದರೆ ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ನನ್ನ ಬಳಿ ತಾವು ಇಂತಹ ಕಾರಣಕ್ಕೆ ದೆಹಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.


ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಕಾರ್ಪೋರೇಷನ್, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028ರಲ್ಲಿ ಕಾಂಗ್ರೆಸ್ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ. 
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಈ ವರೆಗೆ ಎದುರಿಸಿದ್ದೇವೆ, ಮುಂದೆಯೂ ಎದುರಿಸುತ್ತೇವೆ. ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ. 

ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ. ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ.





