Published
4 weeks agoon
By
Akkare News
ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಮಗನಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣಕ್ಕೆ ದಾಖಲಾಗಿದ್ದ ಪ್ರಕರಣದಲ್ಲಿ ತಂದೆಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಆರೋಪಿ ಪಿ.ಜಿ. ಜಗನ್ನಿವಾಸ ರಾವ್ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗೆ ಮಾನ್ಯ ಉಚ್ಚ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪುತ್ತೂರಿನ ಶ್ರೀಕೃಷ್ಣ ಜೆ. ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ಕಳೆದ ಜೂನ್ ತಿಂಗಳಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಶ್ರೀಕೃಷ್ಣ ತಲೆಮರೆಸಿಕೊಂಡಿದ್ದ. ಈ ವೇಳೆ ತಲೆಮರೆಸಿಕೊಂಡ ಮಗನಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣಕ್ಕಾಗಿ ತಂದೆ ಪಿ.ಜಿ. ಜಗನ್ನಿವಾಸ ರಾವ್ ಸೇರಿದಂತೆ ಮೂವರ ಮೇಲೆ ಪೊಲೀಸರು ಬಿಎನ್ಎಸ್ (BNS) ಸೆಕ್ಷನ್ 249 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ತಮ್ಮ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ ಮತ್ತು ಇದನ್ನು ರದ್ದುಪಡಿಸಬೇಕು ಎಂದು ಕೋರಿ ಜಗನ್ನಿವಾಸ ರಾವ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಮಹತ್ವದ ಅವಲೋಕನ ಮಾಡಿದೆ. “ಯಾವುದೇ ಭದ್ರವಾದ ಅಥವಾ ಸ್ಪಷ್ಟವಾದ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ತಂದೆ ಎಂಬ ಕಾರಣಕ್ಕೆ ಪ್ರಕರಣದಲ್ಲಿ ಭಾಗಿಯಾಗಿಸಿರುವುದು ಸರಿಯಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಆರೋಪಿ ಜಗನ್ನಿವಾಸ ರಾವ್ ಪರವಾಗಿ ಹಿರಿಯ ವಕೀಲರಾದ ಪಿ.ಪಿ. ಹೆಗ್ಡೆ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ನ್ಯಾಯಾಲಯವು ಮುಂದಿನ ವಿಚಾರಣೆಯವರೆಗೆ ತನಿಖೆಗೆ ಬ್ರೇಕ್ ಹಾಕಿದೆ.