Published
1 week agoon
By
Akkare News
ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಗುಡ್ನ್ಯೂಸ್ ಕೊಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದ ಬಸವರಾಜ ಬೊಮ್ಮಾಯಿ ಅವರು, ಡಿಸಿಸಿ ಬ್ಯಾಂಕ್ ಕನಸು ನನಸು ಮಾಡಲು ಸಹಕಾರ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.

ಕಳೆದ ಒಂದು ದಶಕದಿಂದ ನಮ್ಮ ಹೋರಾಟವಾಗಿದ್ದ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಯ ಕನಸು ಈಗ ನನಸಾಗುವ ಹಂತಕ್ಕೆ ಬಂದಿದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವೇರಿಗೆ ಮೆಗಾ ಡೈರಿ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೆ. ಅದೇ ರೀತಿ, ಇದೀಗ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೂ ಸಕಾರಾತ್ಮಕ ಬೆಳವಣಿಗೆಗಳು ಕಂಡುಬರುತ್ತಿವೆ.

ಭಾರತ ಸರ್ಕಾರದ ಸಹಕಾರ ಇಲಾಖೆಯ ಸಚಿವರೂ ಆಗಿರುವ ಗೃಹ ಸಚಿವರಾದ ಅಮಿತ್ ಶಾ ಅವರ ದೂರದೃಷ್ಟಿಯ ಫಲವಾಗಿ ‘ಒಂದು ಜಿಲ್ಲೆ – ಒಂದು ಡಿಸಿಸಿ ಬ್ಯಾಂಕ್’ ನೀತಿ ಜಾರಿಗೆ ಬಂದಿದೆ. ಈ ನೀತಿಯಡಿ ನಬಾರ್ಡ್ಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

30-10-2025ರಂದು ನಬಾರ್ಡ್ನ ಜನರಲ್ ಮ್ಯಾನೇಜರ್ ಅವರು ರಿಜಿಸ್ಟ್ರಾರ್ ಆಫ್ ಕೋಆಪರೇಟಿವ್ ಸೊಸೈಟಿಗಳಿಗೆ ಪತ್ರ ಬರೆದು, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಿಗಾಗಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಗತ್ಯ ಆರ್ಥಿಕ ಮತ್ತು ಕಾನೂನು ಸಂಬಂಧಿತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮಾರ್ಗದರ್ಶನ ನೀಡಲಾಗಿದೆ. ನಂತರ 31-01-2026ರಂದು ರಿಜಿಸ್ಟ್ರಾರ್ ಕಚೇರಿಯಿಂದಲೂ ಸಂಬಂಧಿತ ಸೂಚನೆ ಹೊರಬಿದ್ದಿದೆ.

ಕೇಂದ್ರ ಸರ್ಕಾರದಿಂದ ಸ್ಪಷ್ಟ ತೀರ್ಮಾನವಾಗಿದ್ದರೂ ರಾಜ್ಯ ಸರ್ಕಾರ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳದಿರುವುದು ದುರದೃಷ್ಟಕರ. ಸಹಕಾರ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಜಿಲ್ಲೆಗಳಿಗೆ ಹೊಸ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಅಗತ್ಯ ಶಿಫಾರಸ್ಸುಗಳನ್ನು ತ್ವರಿತವಾಗಿ ಕಳುಹಿಸಬೇಕು ಎಂದು ನಾನು ಆಗ್ರಹಿಸುತ್ತೇನೆ.

ಈ ವಿಷಯವಾಗಿ ನಾನು ಡಿಸಿಸಿ ಬ್ಯಾಂಕ್ ಎಂಡಿ ಮತ್ತು ಜಿಎಂ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಬರುವ ಡಿಸಿಸಿ ಬ್ಯಾಂಕ್ ಬೋರ್ಡ್ ಸಭೆಯಲ್ಲಿ ಅಗತ್ಯ ಶಿಫಾರಸ್ಸುಗಳಿಗೆ ಒಪ್ಪಿಗೆ ನೀಡಿ ರಾಜ್ಯ ಸರ್ಕಾರಕ್ಕೆ ಕಳುಹಿಸುವಂತೆ ಅಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಗೆ ವಿನಂತಿಸುತ್ತೇನೆ. ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರಸ್ತಾವನೆ ಕಳುಹಿಸಿದರೆ, ಮುಂದಿನ ಆರ್ಥಿಕ ವರ್ಷದಲ್ಲಿಯೇ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ನಿಶ್ಚಿತ. ಹಾವೇರಿ ಮತ್ತು ಗದಗ ಜಿಲ್ಲೆಯ ರೈತರ ಬಹುಕಾಲದ ಕನಸು ಇದೀಗ ಸಾಕಾರಗೊಳ್ಳುವ ಹಂತದಲ್ಲಿದೆ. ಇದಕ್ಕಾಗಿ ಎಲ್ಲರ ಸಹಕಾರವನ್ನು ಕೋರುತ್ತೇನೆ. ಮತ್ತೊಮ್ಮೆ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ನಮ್ಮ ನಾಯಕರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.






