Published
2 hours agoon
By
Akkare News
ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿಯಲ್ಲಿ ನಿವೇಶನ ಕೋರಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಅರ್ಜಿ ಬಾಕಿ ಇವೆ ಎಂದು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ನೀಡುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ರಾಜ್ಯಾದ್ಯಂತ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ವಾಸಯೋಗ್ಯ ಜಾಗ ಗುರುತಿಸಿ ಹೊಸ ಬಡಾವಣೆಗಳನ್ನು ನಿರ್ಮಿಸುವ ಮೂಲಕ ನಿವೃತ್ತ ಸೈನಿಕರಿಗೆ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ವಿಧಾನಸಭೆಯಲ್ಲಿ ಮಾಹಿತಿಯನ್ನು ನೀಡಿದರು.
ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಹರಿಹರ ತಾಲೂಕು ಶಾಸಕರಾದ ಬಿ.ಪಿ. ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಾವಣಗೆರೆ ಜಿಲ್ಲೆಯಲ್ಲಿ ಒಟ್ಟಾರೆ 338 ಜನ ಮಾಜಿ ಸೈನಿಕರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರವು ರಾಜ್ಯಾದ್ಯಂತ ಇರುವ ಎಲ್ಲಾ ಅರ್ಹ ಮಾಜಿ ಸೈನಿಕರಿಗೆ ಅರ್ಹತೆ ಆಧಾರದಲ್ಲಿ ನಿವೇಶನ ನೀಡಬೇಕು ಎಂದು ಸರ್ಕಾರವೂ ಘೋಷಿಸಿದೆ. ಆದರೆ, ಈ ಯೋಜನೆಯ ಅನುಷ್ಠಾನಗೊಳಿಸಲು ಸಾಕಷ್ಟು ಜಮೀನಿನ ಅಗತ್ಯವಿದೆ. ವಾಸಯೋಗ್ಯ ಸ್ಥಳವನ್ನು ಗುರುತಿಸಿ ಬಡವಾಣೆ ನಿರ್ಮಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ 14 ಎಕರೆ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಕನಿಷ್ಠ 350 ನಿವೇಶನಗಳನ್ನು ನಿರ್ಮಿಸಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.
ಬೆರಳ ತುದಿಯಲ್ಲಿ ಮಾಹಿತಿ: ರಾಜ್ಯದ ಯಾವ ತಾಲೂಕು ಹಾಗೂ ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಮಾಜಿ ಸೈನಿಕರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ದಾಖಲೆ ಬೆರಳ ತುದಿಯಲ್ಲಿದೆ. ಈ ಎಲ್ಲಾ ಅರ್ಜಿಗಳನ್ನೂ ಆನ್ಲೈನ್ ಮೂಲಕ ಡಿಜಿಟಲೀಕರಣ ಮಾಡಲಾಗಿದೆ. ಈ ಹಿಂದೆ ಅರ್ಜಿಗಳ ಸಮಗ್ರ ದಾಖಲೆಗಳು ಲಭ್ಯವಾಗದ ಕಾರಣ, ಯಾವ ತಾಲೂಕಿನಲ್ಲಿ ಎಷ್ಟು ಅರ್ಜಿ ಇದೆ ಎಂದು ತಹಶೀಲ್ದಾರ್ ಗೆ ಪತ್ರ ಬರೆಯಬೇಕಿತ್ತು. ಆದರೆ ಈಗ ಎಲ್ಲಾ ಅರ್ಜಿಗಳನ್ನು ಆನ್ಲೈನ್ ಮೂಲಕ ಡಿಜಿಟಲೀಕರಣಗೊಳಿಸಲಾಗಿದ್ದು, ರಾಜ್ಯದ ಯಾವುದೇ ಭಾಗದ ಮಾಹಿತಿಯನ್ನೂ ತಕ್ಷಣವೇ ಪಡೆಯಬಹುದಾಗಿದೆ. ನಮ್ಮ ಬೆರಳ ತುದಿಯಲ್ಲಿ ಎಲ್ಲಾ ಮಾಹಿತಿ ಲಭ್ಯವಿದ್ದು, ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ನಿವೇಶನ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವೈದ್ಯರ ಬೇಡಿಕೆಗಳನ್ನು ಚರ್ಚಿಸಲು ಆರೋಗ್ಯ ಇಲಾಖೆ ಇದುವರೆಗೆ ಏಳು ಸಭೆಗಳನ್ನು ನಡೆಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಪ್ರದವಾಗಲಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಸಂಘದ ನಾಯಕರು ತಿಳಿಸಿದ್ದಾರೆ.
ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಈ ಸಂಬಂಧವಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಮೇಟಿ ಅವರ ನೇತೃತ್ವದಲ್ಲಿ ವೈದ್ಯರು ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಸರ್ಕಾರಿ ವೈದ್ಯರ ಮುಷ್ಕರದಿಂದ ರಾಜ್ಯದ ಆರೋಗ್ಯ ಸೇವೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದ್ದು, ವಿಶೇಷವಾಗಿ ಬಡ ರೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.