Published
2 hours agoon
By
Akkare News
ಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ದಿನೇ ದಿನೇ ಹದಗೆಡುತ್ತಿರುವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ರಾತ್ರಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಮಾತುಕತೆಯ ವೇಳೆ ಸಂಘರ್ಷದಿಂದ ಉಂಟಾಗುತ್ತಿರುವ ಸಾವು-ನೋವು ಹಾಗೂ ಮೂಲಸೌಕರ್ಯಗಳ ನಾಶದ ಬಗ್ಗೆ ಪ್ರಧಾನಿಯವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಈ ಬಿಕ್ಕಟ್ಟಿನ ಸಮಯದಲ್ಲಿ ಭಾರತದ ಪ್ರಮುಖ ಆದ್ಯತೆಗಳ ಬಗ್ಗೆ ಸ್ಪಷ್ಟಪಡಿಸಿದರು. ಇರಾನ್ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಈ ವಲಯದ ಮೂಲಕ ನಡೆಯುವ ತೈಲ ಹಾಗೂ ಸರಕು ಸಾಗಣೆಗೆ ಯಾವುದೇ ಅಡೆತಡೆ ಉಂಟಾಗಬಾರದು ಎಂಬುದು ಭಾರತದ ಪ್ರಮುಖ ಕಾಳಜಿಯಾಗಿದೆ ಎಂದು ಅವರು ಅಧ್ಯಕ್ಷರಿಗೆ ತಿಳಿಸಿದರು.

ಈ ಮಾತುಕತೆಯ ವಿವರಗಳನ್ನು ಹಂಚಿಕೊಂಡಿರುವ ಪ್ರಧಾನಿ, ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂವಹನ ಮುಂದುವರಿಯಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜಾಗತಿಕ ಇಂಧನ ಭದ್ರತೆ ಮತ್ತು ಆರ್ಥಿಕತೆಯ ದೃಷ್ಟಿಯಿಂದ ಈ ಭಾಗದಲ್ಲಿ ಸರಕು ಸಾಗಣೆ ಸುಗಮವಾಗಿರುವುದು ಅತ್ಯಂತ ಅವಶ್ಯಕ ಎಂದು ಅವರು ಪ್ರತಿಪಾದಿಸಿದ್ದಾರೆ.





