Connect with us

ಕ್ರೈಮ್ ನ್ಯೂಸ್

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವದ ಗುರುತು ಪತ್ತೆ; ಜಿಮ್ ಟ್ರೈನರ್ ವಿಜಯ್ ಕುಮಾರ್ ಕೊಲೆ ಶಂಕೆ

Published

on

​ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವದ ಗುರುತು ಪತ್ತೆಯಾಗಿದ್ದು, ಮೃತ ವ್ಯಕ್ತಿ ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ವಿಜಯ್ ಕುಮಾರ್ (32) ಎಂದು ತಿಳಿದುಬಂದಿದೆ.

 

​ ಹಲವು ವರ್ಷಗಳ ಹಿಂದೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ವಿಜಯ್ ಕುಮಾರ್, ಕೆಆರ್ ಪುರಂ ಪ್ರದೇಶದಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಯುವತಿಯೊಬ್ಬಳನ್ನು ಪ್ರೀತಿಸಿ ಸುಮಾರು ಏಳು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಮದುವೆಯಾದ ದಿನದಿಂದಲೇ ಪತಿ-ಪತ್ನಿ ನಡುವೆ ವೈಮನಸ್ಸು ಆರಂಭವಾಗಿದ್ದು, ಪತ್ನಿ ಪದೇಪದೇ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾರಣ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.

​ಈ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಬಳಿಕ ವಿಜಯ್ ಕೆಆರ್ ಪುರಂನಿಂದ ಎಲೆಕ್ಟ್ರಾನಿಕ್ ಸಿಟಿಗೆ ಸ್ಥಳಾಂತರಗೊಂಡು ಅಲ್ಲಿನ ಜಿಮ್‌ನಲ್ಲಿ ಕೆಲಸ ಮುಂದುವರಿಸಿದ್ದರು. ಇದೇ ನಡುವೆ ಪತ್ನಿ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಿಜಯ್, ಅವರ ತಂದೆ-ತಾಯಿ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಳು ಎಂದು ತಿಳಿದುಬಂದಿದೆ.ಕಳೆದ ಸೋಮವಾರ ವಿಜಯ್ ತಂದೆ ಪಾಪರೆಡ್ಡಿ ಮಗನಿಗೆ ಕರೆ ಮಾಡಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿರುವುದು ಗಮನಕ್ಕೆ ಬಂದಿದೆ. ದಿನವಿಡೀ ಸಂಪರ್ಕಕ್ಕೆ ಸಿಗದ ಕಾರಣ ಆತಂಕಗೊಂಡ ಅವರು ವಿಜಯ್ ಸ್ನೇಹಿತರನ್ನು ಸಂಪರ್ಕಿಸಿದರೂ ಯಾವುದೇ ಮಾಹಿತಿ ದೊರಕಿರಲಿಲ್ಲ. ಇದರಿಂದ ಕಂಗಾಲಾದ ಪೋಷಕರು ಮುಳಬಾಗಿಲಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಬಂದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪುತ್ರ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಈ ವೇಳೆ ಬನ್ನೇರುಘಟ್ಟದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವದ ಬಗ್ಗೆ ಪೊಲೀಸರಿಂದ ಮಾಹಿತಿ ದೊರೆತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹವನ್ನು ತೋರಿಸಿದಾಗ ಅದು ತಮ್ಮ ಮಗ ವಿಜಯ್ ಕುಮಾರ್ ಎಂಬುದನ್ನು ಪೋಷಕರು ಗುರುತಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿಜಯ್ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳ ಬಂಧನದ ಬಳಿಕವೇ ಕೊಲೆ ಹಿಂದಿನ ನಿಖರ ಕಾರಣ ಹಾಗೂ ರಹಸ್ಯ ಬಹಿರಂಗವಾಗುವ ಸಾಧ್ಯತೆ ಇದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement