ಮಂಗಳೂರು, : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ಹಾಗೂ ಶಾಶ್ವತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.
ಉಚಿತ ಕಾನೂನು ಸಲಹೆಗಾಗಿ ಎನ್ ಎ ಎಲ್ ಎಸ್ ಎ-15100 ಸಂಖ್ಯೆಗೆ ಕರೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.