ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ ಪಾತ್ ಕಾರ್ಯಾಚರಣೆಯ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಈ ಘಟನೆಯ ಬೆನ್ನಲ್ಲೇ ಆರೋಪಿಗಳ ಬಂಧನ ಆಗಿದೆ. ಈ ನಡುವೆ ದಾಳಿಗೆ ಹೆದರದೆ ಅಧಿಕಾರಿಗಳು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಕೇಂದ್ರ ಪಾಲಿಕೆಯ ಆಯುಕ್ತರಾದ ಜಗದೀಶ್ ನೇತೃತ್ವದಲ್ಲೇ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.ಸಚಿವರಾದ ಕೃಷ್ಣ ಬೈರೇಗೌಡ ಅವರ ಕಟ್ಚುನಿಟ್ಚಿನ ಸೂಚನೆಯ ಮೇರೆಗೆ ಬೆಂಗಳೂರು ಕೇಂದ್ರ ಪಾಲಿಕೆಯ ಆಯುಕ್ತರಾದ ಜಗದೀಶ್ ಹಾಗೂ ಅಪರ ಆಯುಕ್ತರಾದ ವೆಂಕಟಾಚಲಪತಿ ಅವರು ಶಿವಾಜಿನಗರದಲ್ಲಿ ಖುದ್ದಾಗಿ ಮುಂದೆ ನಿಂತು ಅಲ್ಲಿನ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ. ಪಾದಾಚಾರಿ ಮಾರ್ಗ ಒತ್ತುವರಿ ತೆರವು ಮಾಡಲೇಬೇಕು ಎಂಬುದು ಸುಪ್ರೀಂಕೋರ್ಟ್ ಸೂಚನೆಯಾಗಿದ್ದು ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಡಿ ಇಡುವ ಮಾತೇ ಇಲ್ಲ. ಅಲ್ಲದೆ, ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ಮಾಡುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ದಾಳಿಕೋರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನ ದಾಳಿಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿಯ ಹಿಂದಿನ ಪ್ರಮುಖ ಸೂತ್ರಧಾರ ಬಸವರಾಜ ಪುದುಕೋಟೆ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಲ್ಲಾ ದಾಳಿಕೋರರ ಮೇಲೆಯೂ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು.ಘಟನೆ ಬಗ್ಗೆ ಸಚಿವ ಪ್ರತಿಕ್ರಿಯೆ ಏನು? ನಮ್ಮ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡುವಾಗ ಅವರ ಕೆಲಸಕ್ಕೆ ಅಡ್ಡಿಪಡಿಸುವುದು ಅಥವಾ ಅವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳನ್ನು ಕಂಡು ನಾವಂತೂ ಖಂಡಿತ ಸುಮ್ಮನಿರಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಎಂಬ ವ್ಯಕ್ತಿ ಮೇಲ್ನೋಟಕ್ಕೆ ಇಂತಹ ದಂಧೆಯಲ್ಲಿ ತೊಡಗಿರುವಂತೆ ಕಂಡುಬಂದಿದ್ದು, ಆತನ ವಿರುದ್ಧ ಗೂಂಡಾ ಕೇಸ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಪೊಲೀಸ್ ಭದ್ರತೆ ಘಟನೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆಯ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆರೋಪಿಗಳ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಮನವಿಯನ್ನು ಅಧಿಕಾರಿಗಳು ಮಾಡಿಕೊಂಡಿದ್ದಾರೆ.