ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ಸಂಜೆ 4.05 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಕಾಂಗ್ರೆಸ್ ಶಾಸಕರಿಗೆ ನಿರಾಸೆಯಾಗಿದ್ದು, ಅದರಲ್ಲೂ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸಂಪುಟ ವಿಸ್ತರಣೆಯನ್ನು “ಮೋಸ” ಎಂದು ಬಣ್ಣಿಸಿದ್ದು, ತಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧವೂ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“ಕೊನೆಯ ಕ್ಷಣದವರೆಗೂ ನನ್ನ ಹೆಸರು ಇತ್ತು”
ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಗೋಪಾಲಕೃಷ್ಣ, ಕೊನೆಯ ಕ್ಷಣದವರೆಗೂ ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿದ್ದೆ ಎಂದು ಹೇಳಿದರು.
“ನಿನ್ನೆ ರಾತ್ರಿ ತನಕ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆದರೆ ಇಂದು ಬೆಳಗ್ಗೆಯೊಳಗೆ ಎಲ್ಲವೂ ಬದಲಾಗಿಬಿಟ್ಟಿತು. ಯಾವ ಕಾರಣಕ್ಕೆ ನನ್ನ ಹೆಸರನ್ನು ಕೈಬಿಡಲಾಯಿತು ಎಂಬುದು ನನಗೆ ಗೊತ್ತಿಲ್ಲ. ಎಲ್ಲ ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಈ ಬಾರಿ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ ಕೊನೆಯ ಕ್ಷಣದಲ್ಲಿ ನನಗೆ ಭಾರೀ ನಿರಾಸೆಯಾಗಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದರು. “ಸಂಪುಟ ವಿಸ್ತರಣೆ ಹೆಸರಿನಲ್ಲಿ ಕೆಲವರಿಗೆ ಮಾತ್ರ ಅವಕಾಶ ನೀಡಲಾಗಿದೆ. ತಮಗೆ ಬೇಕಾದವರನ್ನೇ ಸಚಿವರನ್ನಾಗಿ ಮಾಡಲಾಗಿದೆ. ನಮ್ಮಂತಹ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ನನಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ. ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ,” ಎಂದು ಅವರು ಹೇಳಿದರು.