ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಲೋಪದೋಷಗಳನ್ನು ತಡೆಯಲು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಭೇಟಿಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ನೇತೃತ್ವದ ‘ಎದ್ದೇಳು ಕರ್ನಾಟಕ’ ಹಾಗೂ ಇತರ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. SIR ಪ್ರಕ್ರಿಯೆಯಿಂದಾಗಿ ಅನೇಕ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎದುರಾಗಿದ್ದು, ಈ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಪ್ರಕ್ರಿಯೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಬೇಕು. ಒಂದು ವೇಳೆ ಚುನಾವಣಾ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ವಿಧಾನಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು ಹಾಗೂ ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಲಾಗಿದೆ. ‘ಸ್ಥಳಾಂತರಗೊಂಡವರು’ ಹಾಗೂ ‘ಗೈರುಹಾಜರಿ’ ವರ್ಗದಲ್ಲಿರುವ ಮತದಾರರ ಹೆಸರುಗಳನ್ನು ತಕ್ಷಣವೇ ಪಟ್ಟಿಯಿಂದ ತೆಗೆದುಹಾಕದೆ, ಬಿಎಲ್ ಒ (BLO)ಗಳು ನೇರವಾಗಿ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ರಾಜ್ಯ ಸರ್ಕಾರದ ವತಿಯಿಂದ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸುವಂತೆ ಪ್ರತಿನಿಧಿಗಳು ಸಿಎಂ ಅವರಿಗೆ ಸಲಹೆ ನೀಡಿದ್ದಾರೆ. ನಿಮ್ಮ ಮತದಾರರ ನೋಂದಣಿ ಸ್ಥಿತಿ, ಹೆಸರು ಪರಿಶೀಲನೆ ಮತ್ತು ಚುನಾವಣಾ ಸಂಬಂಧಿತ ಅಧಿಕೃತ ಸೇವೆಗಳಿಗಾಗಿ ಭಾರತೀಯ ಚುನಾವಣಾ ಆಯೋಗದ Voters’ Services Portal ಅಥವಾ ECI Citizen Service Portal ಗೆ ಭೇಟಿ ನೀಡಿ ಪರಿಶೀಲಿಸಬಹುದು.