ಬೆಂಗಳೂರು: ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಹಾಗೂ ಸಿ.ಟಿ.ರವಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಇದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಸಿ.ಟಿ.ರವಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದರು. ಇದನ್ನು ಸೌಹಾರ್ದ ಭೇಟಿ ಎಂದು ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದರು. ಸಿಎಂ ಡಿ.ಕೆ.ಶಿವಕುಮಾರ್ಅವರು ದಿಲ್ಲಿಗೆ ತೆರಳಿದ ಕೆಲವೇ ಹೊತ್ತಿನಲ್ಲಿ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿರುವುದು ಇನ್ನಷ್ಟು ಕುತೂಹಲ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯವರು ವಿದೇಶ ಪ್ರವಾಸದಲ್ಲಿದ್ದರು. ಅವರನ್ನು ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದಕ್ಕೆ ಯಾವುದೇ ರಾಜಕೀಯ ಮಹತ್ವ ಇಲ್ಲ ಎಂದು ಹೇಳಲಾಗಿದೆ.