Published
1 year agoon
By
Akkare News
ಬೆಂಗಳೂರು : ಬಾಕಿ ಉಳಿದಿದ್ದ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು (ಅಕ್ಟೋಬರ್ 24) ಅಧಿಕೃತ ಆದೇಶ ಹೊರಡಿಸಿದ್ದಾರೆ.


ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್, ಹೈಕಮಾಂಡ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.



ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಉಪಚುನಾವಣೆಗೆ ಬಿಜೆಪಿಯಿಂದ ಬೊಮ್ಮಾಯಿ ಅವರ ಪುತ್ರ ಭರತ್ ಕಣಕ್ಕಿಳಿದಿದ್ದಾರೆ. ಹೀಗಾಗಿ ಕಾಂಗ್ರೆಸ್ನ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ತಂದೆಯನ್ನು ಎದುರಿಸಿದ್ದರೆ ಈ ಉಪಚುನಾವಣೆಯಲ್ಲಿ ಪುತ್ರನ ವಿರುದ್ಧ ಕಣಕ್ಕಿಳಿಯಲಿದ್ದಾರೆ.





