Published
9 months agoon
By
Akkare News
ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್ ಸಿಇಒ ಅಮಾನತುಗೊಳಿಸಿದ್ದಾರೆ.


ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯವನ್ನು ತೋರಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅವರು ಪಿಡಿಒಗೆ ಕಾರಣ ಕೇಳಿ ನೋಟಿಸು ನೀಡಿದ್ದರು. ನೋಟಿಸಿಗೆ ಪಿಡಿಒ ಅವರು, ಗ್ರಾ.ಪಂ. ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ತನ್ನ ಗಮನಕ್ಕೆ ಬಂದಿಲ್ಲ ಎಂದು ವಿವರಣೆ ನೀಡಿದ್ದರು. ಆದರೆ ಅದನ್ನು ಒಪ್ಪತಕ್ಕದ್ದಲ್ಲ.


ಸರಕಾರಿ ಕಚೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ಅವಕಾಶ ನೀಡಬಾರದು. ಇಲ್ಲಿ ಪಿಡಿಒ ಅವರ ಕರ್ತವ್ಯಲೋಪ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಉಲ್ಲೇಖಿಸಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬಂಟ್ವಾಳ ಅವರು ವರದಿ ಸಲ್ಲಿಸಿದ್ದರು.






