Published
4 months agoon
By
Akkare News
ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ತಿಳಿಸಿದ್ದಾರೆ.

ಪುತ್ತೂರು: ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ತಿಳಿಸಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕ್ಷೇತ್ರದ ಆಡಳಿತ ಸಮಿತಿ ಮತ್ತು ಟ್ರಸ್ಟ್ ವತಿಯಿಂದ ಈ ಮಹತ್ವದ ಯೋಜನೆ ರೂಪುಗೊಂಡಿದ್ದು, ಈಗಾಗಲೇ ನೀಲನಕಾಶೆ ಸಿದ್ಧವಾಗಿದೆ. ಕ್ಷೇತ್ರ ಸಮೀಪ ಖರೀದಿಸಲಾದ 4 ಎಕ್ರೆ ಜಾಗದಲ್ಲಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಗೊಳ್ಳಲಿದೆ. ಅನ್ನಛತ್ರವು ಗೆಜ್ಜೆಗಿರಿ ಧರ್ಮಚಾವಡಿಯ ಮುಂಭಾಗದಲ್ಲಿ ನಿರ್ಮಾಣವಾಗಲಿದೆ ಎಂದು ವಿವರಿಸಿದರು.


ಗಣ್ಯರ ಉಪಸ್ಥಿತಿಯಲ್ಲಿ ಶಿಲಾನ್ಯಾಸ:
ಕಾರ್ಯಕ್ರಮದ ಶಿಲಾನ್ಯಾಸವನ್ನು ಬರೋಡಾದ ಉದ್ಯಮಿ ದಯಾನಂದ ಬೊಂಟ್ರ ಅವರು ನೆರವೇರಿಸಲಿದ್ದಾರೆ. ಸೋಲೂರು ಮಠ ಆರ್ಯಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ, ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.
2 ಕೋಟಿ ರೂ. ಸರಕಾರಿ ಅನುದಾನ:
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ ಅವರು, “ಶಾಸಕರು ಮತ್ತು ಸಹಾಯಕ ಕಮೀಷನರ್ ಅವರ ಮುತುವರ್ಜಿಯಿಂದ ಸರಕಾರದ ಹಂತದಲ್ಲಿ ಕ್ಷೇತ್ರಾಭಿವೃದ್ಧಿಗೆ 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಅನುದಾನವನ್ನು ಹಂತ ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು,” ಎಂದು ತಿಳಿಸಿದರು.
ಭಾವಿ ಯೋಜನೆಗಳು:
ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಜಯಂತ ನಡುಬೈಲು ಮಾತನಾಡಿ, “ಶ್ರೀ ಕ್ಷೇತ್ರಕ್ಕೆ ಹೊರ ಜಿಲ್ಲೆ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಧ್ಯಾನ ಮಂದಿರ, ದೇಯಿ ಬೈದೆತಿ ಔಷಧ ವನದಲ್ಲಿ ಆಯುರ್ವೇದ ಆಸ್ಪತ್ರೆ ನಿರ್ಮಾಣದಂತಹ ಮಹತ್ವದ ಯೋಜನೆಗಳೂ ನಮ್ಮ ಮುಂದಿವೆ. ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಸಣ್ಣಪುಟ್ಟ ಬದಲಾವಣೆಗಳು ಒಂದು ವರ್ಷದೊಳಗೆ ನಡೆಯಲಿವೆ,” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನಾರಾಯಣ ಮಚ್ಚಿಮಲೆ ಹಾಗೂ ಟ್ರಸ್ಟ್ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.

ಯಾತ್ರಿ ನಿವಾಸದ ವಿಶೇಷತೆಗಳು:
ಸುಮಾರು 60ಸಾವಿರ ಚದರ ಅಡಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಗೊಳ್ಳಲಿದ್ದು, ಒಟ್ಟು 5 ಅಂತಸ್ತು ಇರಲಿದೆ. ನೆಲ ಮಹಡಿಯಲ್ಲಿ ಪಾಕಶಾಲೆ, ಮೇಲಂತಸ್ತಿನಲ್ಲಿ 20 ಕೊಠಡಿಗಳು, ಸಮುದಾಯಭವನ, ದೇಯಿ ಬೈದೆತಿ ಆಯುರ್ವೇದ ಸಂಶೋಧನಾ ಟ್ರಸ್ಟ್ ಬರಲಿದೆ. ಪ್ರಥಮ ಹಂತದಲ್ಲಿ 20 ಕೊಠಡಿಗಳು ನಿರ್ಮಾಣ ಆಗಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ತಿಳಿಸಿದ್ದಾರೆ.

