Published
4 hours agoon
By
Akkare News
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5,202 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ನೇರ ನೇಮಕಾತಿಯ ಮೂಲಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನೂ ಒಳಗೊಂಡಿವೆ. ಉಳಿದ ನೇರ ನೇಮಕಾತಿಗಳಲ್ಲೂ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.

ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 3361 ದೈಹಿಕ ಶಿಕ್ಷಕರ ಹುದ್ದೆಗಳು ಹಾಗೂ ಪ್ರೌಢಶಾಲೆಗಳಲ್ಲಿ 1861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ಖಾಲಿ ಇವೆ. ಕೇಲವ ದೈಹಿಕ ಶಿಕ್ಷಕರ ಹುದ್ದೆಗಳು ಮಾತ್ರವಲ್ಲದೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಖಾಲಿ ಇರುವ ಇತರ ಹುದ್ದೆಗಳನ್ನು ಕ್ರಮೇಣ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ನೇರ ನೇಮಕಾತಿ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಶಿಕ್ಷಣವೆಂದರೆ ಕೇವಲ ಪಠ್ಯ ಜ್ಞಾನವಲ್ಲ. ವ್ಯಕ್ತಿಯ ವ್ಯಕ್ತಿತ್ವದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ ಜೊತೆಗೆ ದೈಹಿಕ ಶಿಕ್ಷಣವೂ ಮುಖ್ಯ. ಅದು ಸಹ ಶಿಕ್ಷಣದ ಅಂಗವಾಗಿದೆ. ರಾಜ್ಯದ ಅನೇಕ ಶಾಲೆಗಳಲ್ಲಿ ಈ ಶಿಕ್ಷಣ ಹೇಳಿಕೊಡುವ ಶಿಕ್ಷಕರ ಕೊರತೆ ಇದೆ. ಖಾಲಿ ಹುದ್ದೆಗಳ ಭರ್ತಿಗೆ ಹಿಂದಿನಿಂದಲೂ ಆಗ್ರಹವಿತ್ತು. ಸಚಿವರ ಅಧಿಕೃತ ಮಾಹಿತಿಯಿಂದ ಈ ಬೇಡಿಕೆ ಈಡೇರಿಕೆಗೆ ಕಾಲ ಕೂಡಿ ಬಂದಂತಾಗಿದೆ.

ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಸಾಧ್ಯತೆ ದೈಹಿಕ ಶಿಕ್ಷರ ಹುದ್ದೆಗಳನ್ನು ಮಾತ್ರವಲ್ಲದೇ ಪ್ರಸ್ತಕ ವರ್ಷದಲ್ಲಿ 15,000 ಬೋಧಕ ಹುದ್ದೆಗಳನ್ನು (ಶಿಕ್ಷಕರು) ಭರ್ತಿ ಮಾಡುವುದಾಗಿ ಇತ್ತೀಚೆಗೆ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುವ ಮೂಲಕ ಸಿಹಿ ಸುದ್ದಿ ಕೊಟ್ಟಿದ್ದರು. ಅವರ ಈ ಘೋಷಣೆ ಶೀಘ್ರವೇ ಕಾರ್ಯರೂಪಕ್ಕೆ ಬರಬೇಕಿದೆ. ಇದರೊಂದಿಗೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (KPS) ಉನ್ನತೀಕರಿಸಲು 3,900 ಕೋಟಿ ರೂ. ಅನುದಾನ, ಶಾಲಾ ದುರಸ್ತಿಗೆ 565 ಕೋಟಿ ರೂ. ಮತ್ತು ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಅನದಾನ ಒದಗಿಸುವುದಾಗುವುದೆಂದು ಸರ್ಕಾರ ಶಿಕ್ಷಣ ಇಲಾಖೆಗೆ ಆದ್ಯತೆ ನೀಡುತ್ತಿರುವುದಾಗಿ ಅವರು ಹೇಳಿದ್ದರು.






