Connect with us

ಶಾಲಾ ಚಟುವಟಿಕೆ

ಜೂ.1 ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ – ಮುಖ್ಯಮಂತ್ರಿಗಳಿಂದ ಚಾಲನೆ

Published

on

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ  ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು.
ಮುಂಬರುವ ಜೂ.1 ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ರು. ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’  ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ಪ್ರಕಟಿಸಿದರು.
ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ, ಸಿಎಂ ಶಿವಮೊಗ್ಗದಲ್ಲಿ ‘ಕರ್ನಾಟಕ ಪಬ್ಲಿಕ್ ಸ್ಕೂಲ್’  ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ, ರಾಜ್ಯಮಟ್ಟದಲ್ಲಿ ಶಿವಮೊಗ್ಗದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಕಾರ್ಯಕ್ರಮ ನೆರವೇರಿಸಲಿದ್ದಾರೆ.

ಕೆಪಿಎಸ್ ಶಾಲೆಗಳ ಉದ್ದೇಶ, ಗುಣಮಟ್ಟ ಮತ್ತು ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸ್ಪಷ್ಟ ಮಾಹಿತಿ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದಾಖಲಾದ ಐತಿಹಾಸಿಕ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಹಾಗೂ ಅಧಿಕಾರಿಗಳ ಹಗಲಿರುಳಿನ ಶ್ರಮವನ್ನ ಸಚಿವ ಮಧು ಬಂಗಾರಪ್ಪ ಅವರು ಶ್ಲಾಘಿಸಿದರು. ಇಲಾಖೆಯ 29-ಅಂಶಗಳ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದು, ಪಾರದರ್ಶಕ ಮೌಲ್ಯಮಾಪನ ಮತ್ತು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿದ ಪ್ರಶ್ನೆಪತ್ರಿಕೆಗಳ ಮೂಲಕ ಉಚಿತವಾಗಿ ನಡೆಸಲಾದ ಪೂರ್ವಸಿದ್ಧತಾ ಪರೀಕ್ಷೆಗಳು ಈ ಸಾಧನೆಗೆ ಕಾರಣವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಜವಾಬ್ದಾರಿಗಳ ಬಗ್ಗೆ ಸಚಿವರು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು. ದಾಖಲಾತಿ ಅಭಿಯಾನ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನ ಗರಿಷ್ಠ ಮಟ್ಟಕ್ಕೆ ಏರಿಸುವುದು ಮೊದಲ ಆದ್ಯತೆಯಾಗಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ, ಜಾಗೃತಿ ಮೂಡಿಸಿ ಮರಳಿ ಶಾಲೆಗೆ ತರಬೇಕು. ಶಾಲಾ ಬಿಸಿಯೂಟ  ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ  ಎಚ್ಚರವಹಿಸುವುದು ಕಡ್ಡಾಯ. ಶಾಲಾ ಪ್ರಾರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲಾ ಅಗತ್ಯ ಸಾಮಗ್ರಿಗಳನ್ನು ಸಕಾಲದಲ್ಲಿ  ವಿತರಿಸಬೇಕು. ಡಿಡಿಪಿಐ, ಬಿಇಒ, ಸಿಆರ್‌ಪಿ ಮತ್ತು ಬಿಆರ್‌ಪಿ ಅಧಿಕಾರಿಗಳು ಕೇವಲ ಕಡತಗಳ ಪರಿಶೀಲನೆ ಮಾಡದೆ, ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಗುಣಮಟ್ಟದ ಬೋಧನೆ ಮತ್ತು ಶಿಕ್ಷಕರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಬೇಕು.

ಎಸ್‌ಎಸ್‌ಎಲ್‌ಸಿ ಒಂದು ಅರ್ಹತಾ ಪರೀಕ್ಷೆಯಾಗಿದ್ದು, ಉನ್ನತ ಶಿಕ್ಷಣಕ್ಕೆ ಸೇತುವೆಯಂತಿದೆ. ವಿದ್ಯಾರ್ಥಿಗಳೇ ಕರ್ನಾಟಕದ ಮಾನವ ಸಂಪನ್ಮೂಲದ ಮೂಲಾಧಾರವಾಗಿದ್ದಾರೆ. ಹೀಗಾಗಿ, ಎಸ್ಎಸ್ಎಲ್ಸಿ ಫಲಿತಾಂಶದ ಸಂಪೂರ್ಣ ಸುಧಾರಣೆಗೆ ಪ್ರತಿಯೊಬ್ಬ ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು ಎಂಬ ಮುಖ್ಯಮಂತ್ರಿಗಳ ಆಶಯವನ್ನು ಸಚಿವರು ಸಭೆಯಲ್ಲಿ ಪುನರುಚ್ಚರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement