Connect with us

ಇಂದಿನ ಕಾರ್ಯಕ್ರಮ

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

Published

on

ಮಂಗಳೂರು, ಮೇ. 24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಕದ್ರಿ ಸಮಾಜ ಕಲ್ಯಾಣ ಇಲಾಖೆ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಶುಕ್ರವಾರದಂದು ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದುವರಿದಿರುವುದರಿಂದ, ರಾಜ್ಯದ ಇತರ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದಾರೆ. ಇದರಿಂದ ಹಾಸ್ಟೆಲ್‍ ಗಳಿಗೆ ಸಾಕಷ್ಟು ಬೇಡಿಕೆ ಇದೆ. ಹಾಸ್ಟೆಲ್ ಪ್ರವೇಶಕ್ಕೆ ಬಹಳ ಅರ್ಜಿಗಳು ಬರುತ್ತಿದ್ದು, ಕೆಲವರಿಗೆ ಸೀಟ್ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳಡಿ ಹಾಸ್ಟೆಲ್‍ ಗಳನ್ನು ಮಂಜೂರುಗೊಳಿಸಿ ಕಟ್ಟಡಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಸಚಿವರು ತಿಳಿಸಿದರು. ಸುಮಾರು 6.50 ಕೋಟಿ ವೆಚ್ಚದಲ್ಲಿ ನಗರದ ಕದ್ರಿಯಲ್ಲಿ ನಿರ್ಮಾಣವಾಗಿರುವ ಸಮಾಜ ಕಲ್ಯಾಣ ಇಲಾಖೆ ಡಾ. ಬಿ. ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವು ಸುಮಾರು 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಿದೆ. ಹಾಸ್ಟೆಲ್‍ನಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಕಲಿಕೆಗೆ ಪೂರಕವಾದ ವಾತಾವರಣ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್.ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement