Published
1 hour agoon
By
Akkare News
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ಯು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದೀಗ ಯೋಜನೆ ಕುರಿತು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತಿದೆ. ಆದರೆ ಇದೀಗ ಈ ಯೋಜನೆಯ ಪರಿಷ್ಕರಣೆಗೆ ಮುಂದಾಗಿರುವ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ‘ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆಗೂ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಫಲಾನುಭವಿಗಳ ಪಟ್ಟಿಯನ್ನು ಸರ್ಜರಿ ಮಾಡಲು ಮುಂದಾದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸರ್ಕಾರವು ‘ಆಪರೇಷನ್ ಗೃಹಲಕ್ಷ್ಮಿ’ ಆರಂಭಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆಯಲ್ಲಿ ಯೋಜನೆಗೆ ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಲು ಹಾಗೂ ನಕಲಿ ಅಥವಾ ಅನರ್ಹ ಖಾತೆಗಳನ್ನು ತಡೆಯಲು ಬಯೋಮೆಟ್ರಿಕ್ ಅಥವಾ ‘ಫೇಸಿಯಲ್ ಅಥೆಂಟಿಕೇಷನ್’ (ಮುಖ ಗುರುತಿಸುವಿಕೆ) ದೃಢೀಕರಣ ಪ್ರಕ್ರಿಯೆಯನ್ನು ಜಾರಿಗೆ ತರಲು ತೀರ್ಮಾನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗೃಹಲಕ್ಷ್ಮಿ ಮರುಪರಿಶೀಲನೆಗೆ ಕಾರಣ ಏನು? ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ 1.20 ಕೋಟಿಗೂ ಅಧಿಕ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಆದರೆ ಮೃತಪಟ್ಟವರ ಖಾತೆಗೂ ಹಣ ಜಮಾವಣೆ ಆಗುತ್ತಿರುವುದು ಹಾಗೂ ಸರ್ಕಾರದ ನಿಯಮಾವಳಿಗಳಿಗೆ ಒಳಪಡದ ಅನರ್ಹರು ಯೋಜನೆಯ ಲಾಭ ಪಡೆಯುತ್ತಿರುವ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಅಕ್ರಮ ತಡೆದು, ನಿಜವಾದ ಬಡ ಕುಟುಂಬಗಳಿಗೆ ಯೋಜನೆಯನ್ನು ತಲುಪಿಸುವ ನಿಟ್ಟಿನಲ್ಲಿ ಮರುಪರಿಶೀಲನೆ ನಡೆಸಲಾಗುತ್ತಿದೆ.
ಮರುಪರಿಶೀಲನೆಯಿಂದ ಆಗುವ ಲಾಭವೇನು? ಪ್ರಾಥಮಿಕ ಪರಿಶೀಲನೆಯ ಭಾಗವಾಗಿ ಈಗಾಗಲೇ ಮೃತಪಟ್ಟಿರುವ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಹಂತದ ಸರ್ಜರಿಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ನಷ್ಟವಾಗುವುದು ತಪ್ಪಿದ್ದು, ದೊಡ್ಡ ಮಟ್ಟದ ಹಣ ಉಳಿತಾಯ ಆಗಲಿದೆ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂಪಾಯಿ ಹಣ ಪಡೆಯುತ್ತಿರುವ ಪ್ರತಿಯೊಬ್ಬ ಅರ್ಹ ಮಹಿಳೆಯು ಸರ್ಕಾರದ ಹೊಸ ಆದೇಶವನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ. ಫಲಾನುಭವಿಗಳು ಒಂದು ತಿಂಗಳ ಒಳಗಾಗಿ ತಮ್ಮ ಬಯೋಮೆಟ್ರಿಕ್ ಅಥವಾ ಮುಖ ದೃಢೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ನಿಗದಿತ ಸಮಯದೊಳಗೆ ಈ ಪ್ರಕ್ರಿಯೆಯನ್ನು ಮುಗಿಸದಿದ್ದರೆ, ಅವರ ಬ್ಯಾಂಕ್ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಕಂತಿನ ಹಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಅನರ್ಹರನ್ನು ಪಟ್ಟಿಯಿಂದ ಹೊರಹಾಕಿ, ಅರ್ಹರಿಗೆ ಮಾತ್ರ ಸರ್ಕಾರದ ಗ್ಯಾರಂಟಿ ತಲುಪಿಸುವ ಉದ್ದೇಶದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ಯೋಜನೆಗೆ ಯಾರೆಲ್ಲಾ ಅರ್ಹರು? * ಪಡಿತರ ಚೀಟಿಯಲ್ಲಿ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆ ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ. * ಅರ್ಜಿದಾರರ ಕುಟುಂಬವು ಸರ್ಕಾರದ ವತಿಯಿಂದ ನೀಡಲಾದ ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಯನ್ನು ಹೊಂದಿರಬೇಕು. * ಅರ್ಜಿದಾರ ಮಹಿಳೆಯು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು. * ಒಂದು ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ ಕೇವಲ ಒಬ್ಬ ಮಹಿಳೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು.
ಯಾರಿಗೆ ಈ ಯೋಜನೆಯ ಹಣ ಸಿಗುವುದಿಲ್ಲ?
* ಆದಾಯ ತೆರಿಗೆ ಪಾವತಿದಾರರು: ಅರ್ಜಿದಾರ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಂತಹವರು ಯೋಜನೆಗೆ ಅರ್ಹರಲ್ಲ.
* ಮಹಿಳೆ ಅಥವಾ ಆಕೆಯ ಪತಿ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದರೆ ಅವರಿಗೆ ಈ ಸೌಲಭ್ಯ ಸಿಗುವುದಿಲ್ಲ.
* ಅರ್ಜಿದಾರ ಮಹಿಳೆಯು ಸರ್ಕಾರಿ ಉದ್ಯೋಗಿ ಆಗಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. 


