Published
20 hours agoon
By
Akkare News
ಬೆಂಗಳೂರು/ಮಂಗಳೂರು, ಆಗಸ್ಟ್ 30: ಮಂಗಳೂರು ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಎಂ ಡಿ.ಕೆ.ಶಿವಕುಮಾರ್ಗೆ ಪತ್ರ ಬರೆದಿದ್ದಾರೆ. KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಆರೋಪಗಳಿವೆ. ಹೀಗಾಗಿ ಈ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಹಣದಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಹಾಗೂ ನಿಯಮಾನುಸಾರ ಕಾರ್ಯನಿರ್ವಹಣೆ ಅತ್ಯಂತ ಅಗತ್ಯವಾಗಿರುತ್ತದೆ. ಆದರೆ, ಈ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಸತ್ಯವಾಗಿದ್ದಲ್ಲಿ, ಅದು ಸಾರ್ವಜನಿಕ ಹಣದ ದುರುಪಯೋಗಕ್ಕೆ ಕಾರಣವಾಗುವುದಲ್ಲದೆ, ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ಗಂಭೀರ ವಿಷಯವಾಗಿದೆ. ಆದ್ದರಿಂದ, ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡುತ್ತಿದ್ದೇನೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ.
ತನಿಖೆಯಲ್ಲಿ ಆರೋಪಗಳು, ಸಾಬೀತಾದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅನ್ವಯಿಸುವ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳನ್ವಯ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದ ಹಣಕ್ಕೆ ನಷ್ಟ ಉಂಟಾಗಿರುವುದು ಅಥವಾ ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ದೃಢಪಟ್ನಲ್ಲಿ, ಅಂತಹ ಮೊತ್ತವನ್ನು ವಸೂಲಿ ಮಾಡುವುದರ ಜೊತೆಗೆ ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ಅಶೋಕ್ ಕುಮಾರ್ ರೈ ಆಗ್ರಹಿಸಿದ್ದಾರೆ.



